ಜುಲೈ ೩ರಿಂದ ಅಮರನಾಥ ಯಾತ್ರೆ ಆರಂಭ
ದಕ್ಷಿಣ ಕಾಶ್ಮೀರದ ಹಿಮಾಲಯದ ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥ ಯಾತ್ರೆಗೆ ಜುಲೈ 3 ರಂದು ಚಾಲನೆ ಸಿಗಲಿದೆ. ಆಗಸ್ಟ್ 9 ರವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಸಮುದ್ರ ಮಟ್ಟದಿಂದ 12,700 ಅಡಿ ಎತ್ತರದಲ್ಲಿರುವ ಈ ಗುಹೆಯಲ್ಲಿ ನೈಸರ್ಗಿಕವಾಗಿ ರೂಪುಗೊಂಡ ಹಿಮಲಿಂಗವಿದೆ. ಪ್ರತಿ ವರ್ಷ ಸಾವಿರಾರು ಭಕ್ತರು ಈ ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಪ್ರತೀ ದಿನ ಸುಮಾರು 15 ಸಾವಿರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. 13ರಿಂದ 70 ವರ್ಷದೊಳಗಿನವರು ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು. 38 ದಿನಗಳ ಯಾತ್ರೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಶಾಲಿಮಾರ್ ಪ್ರದೇಶದ ವೈಷ್ಣವಿ ಧಾಮ, ಪಂಚಾಯತ್ ಭವನ ಮತ್ತು ಮಹಾಜನ ಸಭಾದಲ್ಲಿ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಸರಸ್ವಿ ಧಾಮದಲ್ಲಿ ಮಾತ್ರವೇ ಟೋಕನ್ ವಿತರಿಸಲಾಗುತ್ತಿದೆ.
ಈಗಾಗಲೇ 1600ಕ್ಕೂ ಅಧಿಕ ಭಕ್ತರು ಭಗವತಿ ಬೇಸ್ ಕ್ಯಾಂಪ್ಗಳಲ್ಲಿ ತಂಗಿದ್ದು, ಸಾಧುಗಳಿಗಾಗಿ ಪುರಾನಿ ಮಂಡಿಯಲ್ಲಿರುವ ರಾಮ ದೇಗುಲದ ಸಂಕೀರ್ಣದಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ. ಅನಂತ್ ನಾಗ್ ಜಿಲ್ಲೆಯ 48ಕಿಲೋ ಮೀಟರ್ ಉದ್ದದ ನುನ್ವಾನ್-ಪಹಲ್ಗಾಂ ಮಾರ್ಗ ಹಾಗೂ ಗಂದೇರ್ಬಾಳ್ ಜಿಲ್ಲೆಯ 14ಕಿಲೋ ಮೀಟರ್ ಉದ್ದದ ಬಲ್ತಾಲ್ ಮಾರ್ಗದಲ್ಲಿ ಯಾತ್ರೆ ಸಾಗಲಿದೆ. ಈ ಯಾತ್ರೆ ಮಾರ್ಗವನ್ನು ಜುಲೈ 1 ರಿಂದ ಆಗಸ್ಟ್ 10ರವರೆಗೆ ಹಾರಾಟ ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ಈ ಬಾರಿ ಅಮರನಾಥ ಯಾತ್ರೆಗೆ ಭದ್ರತಾ ವ್ಯವಸ್ಥೆಯನ್ನು ತೀರಾ ಅಚ್ಚುಕಟ್ಟಾಗಿ, ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಗುಪ್ತಚರ ಸಂಸ್ಥೆಗಳಿಂದ ಬಂದ ಭಯೋತ್ಪಾದಕ ದಾಳಿಯ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಯಾತ್ರೆಯ ಸಮಯದಲ್ಲಿ ಆಗುವ ಯಾವುದೇ ರೀತಿಯ ಭಯೋತ್ಪಾದಕ ಬೆದರಿಕೆಯನ್ನು ತಡೆಯುವ ಉದ್ದೇಶದಿಂದ ಈ ಯಾತ್ರಾ ಮಾರ್ಗವನ್ನು ಹಾರಾಟ ನಿಷೇಧಿತ ವಲಯ ಎಂದು ಘೋಷಿಸಲಾಗಿದೆ.ಈ ಸಮಯದಲ್ಲಿ ಯಾವುದೇ ಸರ್ಕಾರೇತರ ಡ್ರೋನ್, ವಿಮಾನಗಳು, ಹೆಲಿಕಾಪ್ಟರ್ಗಳು ಈ ಪ್ರದೇಶದಲ್ಲಿ ಹಾರಲು ಸಾಧ್ಯವಾಗುವುದಿಲ್ಲ. ಒಂದೊಮ್ಮೆ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ನಡೆದರೆ ತಕ್ಷಣ ಕಣ್ಣಿಗೆ ಬೀಳುತ್ತವೆ. ಇನ್ನು 42,000 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಯನ್ನೊಳಗೊAಡ 580 ತುಕಡಿಗಳ ನಿಯೋಜನೆಗೆ ಕೇಂದ್ರ ಸರ್ಕಾರ ಆದೇಶಿಸಿದೆ. 580 ತುಕಡಿಗಳ ಪೈಕಿ 424 ತುಕಡಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ.

.jpeg)