
Bangalore: ಅಕ್ರಮ ಚಿನ್ನ ಸಾಗಾಟ ಪ್ರಕರಣ; ಡಿಆರ್ಐಯಿಂದ ರನ್ಯಾ ರಾವ್ ಸ್ನೇಹಿತ ಬಂಧನ
25/07/2025
ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧಿತಳಾಗಿರುವ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಮಲ ಮಗಳು, ನಟಿ ರನ್ಯಾ ರಾವ್ರ ಮತ್ತೊಬ್ಬ ಸ್ನೇಹಿತನನ್ನು ಈಗ ಕಂದಾಯ ಗುಪ್ತಚರ ಜಾರಿನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಭರತ್ ಕುಮಾರ್ ಜೈನ್ ಬಂಧಿತನಾಗಿದ್ದು, ಈತನ ಮೂಲಕ ರನ್ಯಾ ರಾವ್ಗೆ ಚಿನ್ನ ಸಾಗಣೆ ಜಾಲದ ಪರಿಚಯವಾಗಿತ್ತು. ಚಿನ್ನ ಮಾರಾಟದಲ್ಲಿ ಆತ ಪ್ರಮುಖ ಪಾತ್ರ ವಹಿಸಿದ್ದ ಎಂದು ತಿಳಿದು ಬಂದಿದೆ.
ಕಳೆದ ಮಾರ್ಚ್ನಲ್ಲಿ ದುಬೈನಿಂದ ಅಕ್ರಮವಾಗಿ 12.5 ಕೋಟಿ ರೂ. ಮೌಲ್ಯದ 14 ಕೆ.ಜಿ. ಚಿನ್ನ ಸಾಗಿಸುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆಕೆಯ ವಿಚಾರಣೆ ವೇಳೆ ಕಳ್ಳ ಸಾಗಣೆ ಸಂಪರ್ಕ ಜಾಲ ಬಯಲಾಗಿತ್ತು.
ಪ್ರಕರಣದಲ್ಲಿ ಆಕೆಯ ಸ್ನೇಹಿತ ಹಾಗೂ ಉದ್ಯಮಿ ಪುತ್ರ ತರುಣ್ ರಾಜು ಹಾಗೂ ಬಳ್ಳಾರಿ ಚಿನ್ನಾಭರಣ ವ್ಯಾಪಾರಿ ಸಾಹಿಲ್ ಜೈನ್ರನ್ನು ಅಧಿಕಾರಿಗಳು ಬಂಧಿಸಿದ್ದರು. ಐದು ತಿಂಗಳ ಅವಧಿಯಲ್ಲಿ ಆರೋಪಿಗಳು 50 ಕೋಟಿ ರೂಪಾಯಿಗೂ ಅಧಿಕ ಚಿನ್ನ ಸಾಗಿಸಿರುವುದು ಪತ್ತೆಯಾಗಿತ್ತು. ರನ್ಯಾ ಬಂಧನ ಬಳಿಕ ತಲೆಮರೆಸಿಕೊಂಡಿದ್ದ ಭರತ್ ಕೊನೆಗೂ ಡಿಆರ್ಐ ಬಲೆಗೆ ಬಿದ್ದಿದ್ದಾನೆ. ವಿದೇಶದಿಂದ ಅಕ್ರಮವಾಗಿ ತರುತ್ತಿದ್ದ ಚಿನ್ನದ ವಿಲೇವಾರಿಯಲ್ಲಿ ಆತ ಪ್ರಮುಖ ಪಾತ್ರ ವಹಿಸಿದ್ದ ಎಂದು ತಿಳಿದು ಬಂದಿದೆ.