Bangalore: ಕೆಎಸ್ಆರ್ಟಿಸಿ ನೌಕರರ ಮುಷ್ಕರ; ಬಸ್ ಸಂಚಾರದಲ್ಲಿ ವ್ಯತ್ಯಯ
Tuesday, August 05, 2025
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಂದು ಸಾರಿಗೆ ನೌಕರರು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಬಂದ್ ಆಗಿದೆ. ಬೆಳಗ್ಗೆ 6 ಗಂಟೆಯಿ0ದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ನಾಲ್ಕು ನಿಗಮಗಳ ಬಸ್ಗಳ ಸಂಚಾರ ಸ್ತಬ್ಧಗೊಂಡಿವೆ. ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ಹಾಸನ, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ ಸೇರಿದಂತೆ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆ ನಡೆಸುತ್ತಿದ್ದಾರೆ.
ವೇತನ ಹಿಂಬಾಕಿ, ಪಿಎಫ್ ಬಾಕಿ, ವೇತನ ಹೆಚ್ಚಳ ಸೇರಿದಂತೆ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡಿರುವ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೆ ಆಗಸ್ಟ್ 4ರಂದು ಸರ್ಕಾರ ಸಂಧಾನ ನಡೆಸಿದೆ. ಆದರೆ ಹಿಂಬಾಕಿ ನೀಡಲು ಸರ್ಕಾರ ಒಪ್ಪದ ಕಾರಣ ಮಂಗಳವಾರ ಮುಷ್ಕರಕ್ಕಿಳಿದಿದ್ದಾರೆ. ಬೆಳಗ್ಗೆಯಿಂದಲೇ ಸಾರಿಗೆ ಬಸ್ಗಳು ರಸ್ತೆಗೆ ಇಳಿಯದೇ ಇರುವುದರಿಂದ ಸರ್ಕಾರಿ ಬಸ್ಸನ್ನೇ ಅವಲಂಬಿಸುವ ಪ್ರಯಾಣಿಕರು ಪರದಾಡುವಂತಾಯಿತು.
ಇನ್ನು ಪ್ರತಿಭಟನೆ ನಡೆಸದಂತೆ ಹೈಕೋರ್ಟ್ ನೀಡಿದ ಆದೇಶಕ್ಕೂ ಮಣಿಯದ ಕೆಎಸ್ಆರ್ಟಿಸಿ ಮುಷ್ಕರ ಆರಂಭಿಸಿದ್ದು, ಹೈಕೋರ್ಟ್ ಆದೇಶ ಕುರಿತು ತಜ್ಞರ ಸಲಹೆ ಪಡೆಯಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಬೆಳಗ್ಗೆ 10 ಗಂಟೆಗೆ ಸಮಿತಿಯ ಪದಾಧಿಖಾರಿಗಳ ಸಭೆ ನಡೆಸಿ ಮುಷ್ಕರದ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ತಿಳಿಸಿದೆ.

