ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ನೇಮಕ
ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಪೋಪ್ ಲಿಯೋ XIV ಅವರು ನೇಮಕ ಮಾಡಿದ್ದಾರೆ. ಅವರು ಪ್ರಸ್ತುತ ಶಿರ್ವದ ಆರೋಗ್ಯ ಮಾತಾ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ನೇಮಕಾತಿಯನ್ನು ರೋಮ್ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ (ಭಾರತೀಯ ಸಮಯ ಸಂಜೆ 4.30ಕ್ಕೆ) ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಅದೇ ಸಮಯದಲ್ಲಿ ಉಡುಪಿ ಜಿಲ್ಲೆಯ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಪ್ರಕಟಿಸಲಾಯಿತು.
ಫಾ. ಲೆಸ್ಲಿ ಕ್ಲಿಫರ್ಡ್ ಅವರು 1962ರ ಆಗಸ್ಟ್ 19ರಂದು ಕರ್ನಾಟಕದ ಉಡುಪಿ ಜಿಲ್ಲೆಯ ಉಚ್ಚಿಲ (ಎರ್ಮಾಳ್) ಗ್ರಾಮದಲ್ಲಿ ಲಾರೆನ್ಸ್ ಡಿಸೋಜಾ ಮತ್ತು ಸಿಸಿಲಿಯಾ ದಂಪತಿಗಳ ಪುತ್ರರಾಗಿ ಜನಿಸಿದರು. ದೈವಿಕ ಕ್ರೈಸ್ತ ಪರಂಪರೆಯ ಕುಟುಂಬದಲ್ಲಿ ಬೆಳೆದ ಅವರು, ಎಂಟು ಸಹೋದರ-ಸಹೋದರಿಯರ ದೊಡ್ಡ ಕುಟುಂಬಕ್ಕೆ ಸೇರಿದವರು. ಕುಟುಂಬದ ನಂಬಿಕೆ ಮತ್ತು ಮೌಲ್ಯಗಳು ಅವರ ಧಾರ್ಮಿಕ ಜೀವನಕ್ಕೆ ಮಹತ್ವದ ಪ್ರೇರಣೆಯಾಗಿವೆ.
ಜೂನ್ 2022ರಿಂದ ಫಾ. ಲೆಸ್ಲಿ ಅವರು ಶಿರ್ವದ ಶೋಕಮಾತಾ ದೇವಾಲಯದ ಧರ್ಮಗುರುಗಳಾಗಿಯೂ, ಡಾನ್ ಬಾಸ್ಕೋ ಹಾಗೂ ಸೈಂಟ್ ಮೇರೀಸ್ ಶಿಕ್ಷಣ ಸಂಸ್ಥೆಗಳ ಸಂಯೋಜಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ, ಉಡುಪಿ ಧರ್ಮಪ್ರಾಂತ್ಯದ ಆಡಳಿತ ಮತ್ತು ನಿರ್ವಹಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು 2022ರಿಂದ 2025ರವರೆಗೆ ಯಾಜಕರ ಮಂಡಳಿಯ ಕಾರ್ಯದರ್ಶಿಯಾಗಿದ್ದು, ಪ್ರಸ್ತುತ ಶಿರ್ವ ವಲಯದ ಪ್ರಧಾನ ಧರ್ಮಗುರುಗಳಾಗಿ, ಉಡುಪಿ ಧರ್ಮಪ್ರಾಂತ್ಯದ ಧಾರ್ಮಿಕ ನ್ಯಾಯಮಂಡಳಿಯ ವಕೀಲ ಹಾಗೂ ಸಲಹೆಗಾರರ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.