ಡಾ. ತಲ್ಲೂರು ಶಿವರಾಮ ಶೆಟ್ಟಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ
ಯಕ್ಷಗಾನ, ಜಾನಪದ, ರಂಗಭೂಮಿ ಸೇರಿದಂತೆ ಸಾಂಸ್ಕೃತಿಕ ರಂಗ ಹಾಗೂ ಸಮಾಜ ಸೇವೆಯಲ್ಲಿ ತಮ್ಮದೇ ಛಾಪನ್ನು ಮೂಡಿಸಿರುವ ಉಡುಪಿಯ ಉದ್ಯಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್ ವಿರಾಜಪೇಟೆ, ಕೊಡಗು ಇವರ ಜಂಟಿ ಆಶ್ರಯದಲ್ಲಿ ಹಾಸನದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜ.18ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಡಾ. ತಲ್ಲೂರು ಅವರು ಪ್ರಸ್ತುತ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಹಾಗೂ ರಂಗಭೂಮಿ ಉಡುಪಿ ಅಧ್ಯಕ್ಷರಾಗಿ, ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಹೋಟೆಲ್ ಮಾಲಕರ ಸಂಘದ ಉಪಾಧ್ಯಕ್ಷರು ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಸಮಾಜ ಸೇವೆ, ಕಲಾರಾಧನೆಗೆ ಸಂದ ಪ್ರಶಸ್ತಿಗಳು ಸಾವಿರಾರು. ಕರ್ನಾಟನ ಜಾನಪದ ವಿಶ್ವವಿದ್ಯಾಲಯ ಅವರಿಗೆ 2022ನೇ ಸಾಲಿನ 'ಗೌರವ ಡಾಕ್ಟರೇಟ್ ' ನೀಡಿ ಗೌರವಿಸಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ತುರುವೆ ರಾಜ್ಯೋತ್ಸವ ಪ್ರಶಸ್ತಿ, ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಸಾಧಕರ ರತ್ನ ಪ್ರಶಸ್ತಿ, ಜಗಜ್ಯೋತಿ ಬಸವೇಶ್ವರ ಕಾಯಕಶ್ರೀ ಪ್ರಶಸ್ತಿ ಸೇರಿದಂತೆ ನಾಡಿನ ಸಾವಿರಾರು ಪ್ರತಿಷ್ಠಿತ ಸಂಘ ಸಂಸ್ಥೆಗಳು ಇವರನ್ನು ಸನ್ಮಾನಿಸಿವೆ.