ಮತಪಟ್ಟಿಯ ಮ್ಯಾಪಿಂಗ್ ಆಗಿದೆಯೊ ಪರಿಶೀಲಿಸಿ: ಜಿಲ್ಲಾಧಿಕಾರಿ
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯು ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರೂ ತಮ್ಮ ಹೆಸರು ಮ್ಯಾಪಿಂಗ್ ಆಗಿದೆಯೋ ಅಥವಾ ಇಲ್ಲ ಎಂದು ತಮ್ಮ ಮತಗಟ್ಟೆಯಲ್ಲಿ ಬಿ.ಎಲ್. ಓ ಅವರಿಂದ ಖಚಿತ ಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯ ಪ್ರತಿಯೊಬ್ಬ ಮತದಾರರೂ ತಮ್ಮ ತಮ್ಮ ಮತಗಟ್ಟೆಗಳ ಅಧಿಕಾರಿ (ಬಿ.ಎಲ್.ಓ) ಗಳನ್ನು ಭೇಟಿ ಮಾಡಿ, 2002 ರ ಮತದಾನ ಪಟ್ಟಿಗೆ 2025 ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡಿಕೊಳ್ಳಬಹುದು ಎಂದ ಅವರು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡಿರುವವರು ಮತದಾರರ ಪಟ್ಟಿಗೆ ನಿಮ್ಮ ಮ್ಯಾಪಿಂಗ್ ಕಾರ್ಯವನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು, ಈ ಹಿಂದೆ ವಾಸವಿದ್ದಂತಹ ತಮ್ಮ ವಾಸದ ವಿಧಾನಸಭಾ ಕ್ಷೇತ್ರದ ಸಂಖ್ಯೆ ಹಾಗೂ ತಮ್ಮ ಕ್ರಮ ಸಂಖ್ಯೆಯನ್ನು ತಿಳಿದುಕೊಂಡು ಬಿ.ಎಲ್.ಓ ಗಳಿಗೆ ಮಾಹಿತಿನೀಡಬೇಕು. ಇವುಗಳನ್ನು ವೆಬ್ ಸೈಟ್ ceo.karnataka.gov.in ನಲ್ಲಿ ಪರಿಶೀಲಿಸಬಹುದಾಗಿದೆ ಎಂದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಯುವ ಜನರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜ. 25 ರಂದು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಆಚರಿಸಲಾಗುವುದು. ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಉತ್ತೇಜಿಸಲು ಹಾಗೂ ಚುನಾವಣೆಯಲ್ಲಿ ಅನುಸರಿಸಲಾಗುವ ಪಾರದರ್ಶಕತೆ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು.
ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಅರಿವು ಮೂಡಿಸುವ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು, ವಿಜೇತರುಗಳಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು. ಚುನಾವಣೆ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪ್ರತೀ ತಾಲೂಕಿಗೆ ಒಬ್ಬರಂತೆ ಬಿ.ಎಲ್.ಓ ರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದ ಅವರು, ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮ ದಿನದಂದು ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವಿತರಿಸಲು ಕ್ರಮ ವಹಿಸಬೇಕು ಎಂದರು.
ಜನವರಿ 25 ಸಾರ್ವತ್ರಿಕ ರಜಾ ದಿನವಾಗಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜನವರಿ 23 ರಂದು ಕಡ್ಡಾಯವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಡಿ.ವೈ.ಎಸ್.ಪಿ ಪ್ರಭು ಡಿ.ಟಿ, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಚುನಾವಣಾ ತರಬೇತುದಾರರಾದ ಅಶೋಕ್ ಕಾಮತ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
