ವಿಮಾ ನೌಕರರ ಸಂಘ ಉಡುಪಿ ವಿಭಾಗದ 21ನೇ ಮಹಿಳಾ ಸಮಾವೇಶ
ವಿಮಾ ನೌಕರರ ಸಂಘ ಉಡುಪಿ ವಿಭಾಗದ 21ನೇ ವಿಭಾಗೀಯ ಮಹಿಳಾ ಸಮಾವೇಶವು ಉಡುಪಿಯ ಲಿಕೋ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಸಮಾವೇಶವನ್ನು ದಕ್ಷಿಣ ಮಧ್ಯ ವಲಯ ವಿಮಾ ನೌಕರರ ಒಕ್ಕೂಟದ ಉಪಾಧ್ಯಕ್ಷೆ ಎಂ. ಕಾಮೇಶ್ವರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳಾ ಕಾರ್ಮಿಕರ ಇಂದಿನ ಸ್ಥಿತಿ, ಉದ್ಯೋಗ ಸ್ಥಳದಲ್ಲಿನ ಸವಾಲುಗಳು ಹಾಗೂ ಸಮಾನತೆ ಸಬಲೀಕರಣದ ಅಗತ್ಯತೆಯ ಬಗ್ಗೆ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಮಹಿಳಾ ಕಾರ್ಮಿಕರನ್ನು ಇನ್ನಷ್ಟು ದುರ್ಬಲಗೊಳಿಸುತ್ತಿವೆ ಎಂದು ಅವರು ಟೀಕಿಸಿ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ಕರೆ ನೀಡಿದರು. ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಶೋಷಣೆ, ವೇತನ ತಾರತಮ್ಯ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತೂ ಅವರು ಗಮನ ಸೆಳೆದರು.
ವಿಮಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ವಿಶ್ವನಾಥ್ ಮಾತನಾಡಿ, ಹೊಸ ಕಾರ್ಮಿಕ ಸಂಹಿತೆಗಳ ದುಷ್ಪರಿಣಾಮಗಳನ್ನು ವಿವರಿಸಿ, ಫೆಬ್ರವರಿ 12ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಮಹಿಳಾ ಉಪಸಮಿತಿ ಸಂಚಾಲಕಿ ನಿರ್ಮಲ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯಗಳ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಉಪಸಮಿತಿಗೆ ಶಿಲ್ಪಾ ಜೆ. ರೆಬೆಲ್ಲೋ ಸಂಚಾಲಕಿಯಾಗಿ ಹಾಗೂ ಸೀತಾಲಕ್ಷ್ಮಿ ಆರ್. ಉಪಸಂಚಾಲಕಿಯಾಗಿ ಸರ್ವಾನುಮತದಿಂದ ಆಯ್ಕೆಯಾದರು. ಸಮಾರಂಭದಲ್ಲಿ ಸಂಘದ ಕೋಶಾಧಿಕಾರಿ ಕವಿತಾ ಎಸ್. ಉಪಸ್ಥಿತರಿದ್ದರು.