ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಸಂಸದ ಕೋಟ ಪ್ರಸ್ತಾವನೆ
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯಲ್ಲಿನ ಕಚೇರಿಯಲ್ಲಿ ಭೇಟಿ ಮಾಡಿ, ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯ ಬಲಪಡಿಸುವ ಕುರಿತು ಮಹತ್ವದ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನಿOದ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳವರೆಗೆ ವಿಸ್ತರಿಸುವ ಅಗತ್ಯವನ್ನು ಸಂಸದ ಕೋಟ ಅವರು ಸಚಿವರ ಗಮನಕ್ಕೆ ತಂದರು. ಉತ್ತರ ಕನ್ನಡ, ಕುಂದಾಪುರ, ಉಡುಪಿ ಹಾಗೂ ಮಂಗಳೂರು ಭಾಗಗಳಿಂದ ಪ್ರತಿದಿನ 600ಕ್ಕೂ ಹೆಚ್ಚು ಸರ್ಕಾರಿ ಮತ್ತು ಖಾಸಗಿ ಬಸ್ಗಳು ಹಾಗೂ ಸಾವಿರಾರು ಖಾಸಗಿ ವಾಹನಗಳು ಬೆಂಗಳೂರಿಗೆ ಸಂಚರಿಸುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ತ್ವರಿತ ಹಾಗೂ ಸುಲಭ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಕರಾವಳಿಗೆ ವಂದೇ ಭಾರತ್ ರೈಲು ಸೇವೆ ಅತ್ಯಗತ್ಯವಾಗಿದೆ ಎಂದು ಅವರು ವಿವರಿಸಿದರು.
ಇದಲ್ಲದೆ, ಮಂಗಳೂರಿನಿOದ ಮುಂಬೈವರೆಗೆ ಹರಡಿರುವ 734 ಕಿ.ಮೀ ಉದ್ದದ ಕೊಂಕಣ ರೈಲ್ವೆ ಮಾರ್ಗವನ್ನು ದ್ವಿಪಥಗೊಳಿಸುವ ಕುರಿತು ಕೂಡ ಸಂಸದ ಕೋಟ ಪ್ರಸ್ತಾವನೆ ಸಲ್ಲಿಸಿದರು. ಹಳಿ ಡಬ್ಲಿಂಗ್ ಮೂಲಕ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬಹುದಾಗಿದ್ದು, ಇದಕ್ಕಾಗಿ ತ್ವರಿತವಾಗಿ ಸರ್ವೆ ನಡೆಸಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಕುಂದಾಪುರ ಹಾಗೂ ಕಾರವಾರ ಭಾಗದ ಪ್ರಯಾಣಿಕರು ಹಲವು ವರ್ಷಗಳಿಂದ ಸಮರ್ಪಕ ರೈಲು ಸೇವೆಯ ಕೊರತೆಯನ್ನು ಎದುರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮಗಳಿಂದ ಇತ್ತೀಚಿನ ವರ್ಷಗಳಲ್ಲಿ ರೈಲ್ವೆ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಕಂಡುಬOದಿದೆ. ಆದರೂ, ಜನಸಂಖ್ಯೆ ಹಾಗೂ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಇನ್ನೂ ಹೆಚ್ಚಿನ ಹೊಸ ರೈಲುಗಳ ಅಗತ್ಯವಿದೆ ಎಂದು ಸಂಸದ ಕೋಟ ಅವರು ರೈಲ್ವೆ ಸಚಿವರಿಗೆ ತಿಳಿಸಿದ್ದಾರೆ.
ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮ ವೃದ್ಧಿ ಹಾಗೂ ವ್ಯಾಪಾರ ಉದ್ಯಮಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಯೋಜನೆಗಳಿಗೆ ಕೇಂದ್ರ ಸರ್ಕಾರ ಸೂಕ್ತ ಆದ್ಯತೆ ನೀಡಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೋರಿದ್ದಾರೆ.