ಪಂಚ ಗ್ಯಾರಂಟಿ ಅದಾಲತ್ ಯಶಸ್ಸಿಗೆ ಸಹಕಾರ ನೀಡಿ: ರಮೇಶ್ ಕಾಂಚನ್
Saturday, February 07, 2026
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ, ಫೆಬ್ರವರಿ ಎರಡನೇ ವಾರದಲ್ಲಿ ಉಡುಪಿ ತಾಲೂಕು ಹಾಗೂ ನಗರಸಭೆ ವ್ಯಾಪ್ತಿಯ ವಾರ್ಡ್ ಮತ್ತು ಪಂಚಾಯತ್ ಮಟ್ಟದಲ್ಲಿ ಪಂಚ ಗ್ಯಾರಂಟಿ ಅದಾಲತ್ ಹಾಗೂ ಗೃಹಲಕ್ಷ್ಮೀ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಉಡುಪಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.
ಉಡುಪಿ ತಾಲೂಕು ಪಂಚಾಯತ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಗಳ ಯಶಸ್ಸಿಗೆ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರುಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಈಗಾಗಲೇ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಆಗಸ್ಟ್ 2023ರಿಂದ ಅಕ್ಟೋಬರ್ 2025ರವರೆಗೆ ಉಡುಪಿ ತಾಲೂಕಿನಲ್ಲಿ ಸುಮಾರು 9.66 ಲಕ್ಷ ಮಹಿಳೆಯರಿಗೆ 193 ಕೋಟಿ ರೂ.ಕ್ಕೂ ಹೆಚ್ಚು ಹಣ ಜಮಾ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಜನವರಿ ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಮಹಿಳೆಯರು ಉಚಿತ ಬಸ್ ಪ್ರಯಾಣ ಸೌಲಭ್ಯ ಪಡೆದಿದ್ದು, ಕೆಎಸ್ಆರ್ಟಿಸಿಗೆ 4.62 ಕೋಟಿ ರೂ. ಆದಾಯ ಬಂದಿದೆ ಎಂದು ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ 681 ವಿದ್ಯಾರ್ಥಿಗಳಿಗೆ 1.72 ಕೋಟಿ ರೂ. ಸಹಾಯಧನ ನೀಡಲಾಗಿದೆ. ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಗಳಲ್ಲಿಯೂ ಉತ್ತಮ ಪ್ರಗತಿ ಕಂಡುಬOದಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ತಾಲೂಕು ಪಂಚಾಯತ್ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
