ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ರಾಜ್ಯಾದ್ಯಂತ ನಾಳೆಯಿಂದ (ಫೆಬ್ರವರಿ 28) ವಿದ್ಯಾರ್ಥಿಗಳ ಭವಿಷ್ಯದ ನಿರ್ಧರಿಸುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಶುರುವಾಗಲಿದೆ.
ಮಾರ್ಚ್ 17ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಈ ಬಾರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಂದ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ 1,217 ಸುಸಜ್ಜಿತ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಎಲ್ಲಾ ಕೇಂದ್ರಗಳಲ್ಲೂ ವೆಬ್ಕಾಸ್ಟಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.
ಈ ಬಾರಿಯ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಖಾಸಗಿ ಬಸ್ಗಳಲ್ಲೂ ಈ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಬೇಕಾಗಿದ್ದ ಕನಿಷ್ಠ ಅಂಕಗಳನ್ನು ಶೇ. 35 ರಿಂದ ಶೇ. 30ಕ್ಕೆ ಇಳಿಕೆ ಮಾಡಲಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಇದ್ದ ಪರೀಕ್ಷಾ ಭಯವನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ.