ಮಾ.14: ಉಡುಪಿ ಜಿಲ್ಲೆಯ 4 ನ್ಯಾಯಾಲಯಗಳಲ್ಲಿ ಲೋಕ ಅದಾಲತ್
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ಮಾ. 14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ 35,263 ಪ್ರಕರಣಗಳ ಪೈಕಿ 4397 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.
ಉಡುಪಿ ನ್ಯಾಯಾಲಯ ಸಂಕೀರ್ಣದ ಸಭಾಂಗಣದಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಬಾಕಿ ಉಳಿದ ಪ್ರಕರಣಗಳನ್ನು ರಾಜೀ ಪ್ರಕ್ರಿಯೆಯ ಮೂಲಕ ವಿಕೇವಾರಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ಸಾಲದ ವಸೂಲಾತಿ, ಮೋಟಾರ್ ವಾಹನ ಅಪಘಾತ ಪ್ರಕರಣಗಳಿಗೆ ಸಂಬಂಧಿತ ಪ್ರಕರಣಗಳಿಗೆ ಸಂಬಂಧಿಸಿ ಈಗಾಗಲೇ ಬ್ಯಾಂಕ್, ವಿಮೆ, ಇನ್ಸೂರೆನ್ಸ್ ಕಂಪನಿಗಳ ಮೂಲಕ ಮಾತುಕತೆ ನಡೆಸಿದ್ದೇವೆ. ಆದರೆ ಉಡುಪಿ ಕಾರ್ಕಳದಲ್ಲಿ ಈ ಬಗ್ಗೆ ಸಂಬOಧಪಟ್ಟ ಕಂಪನಿಗಳಿಂದ ಸೂಕ್ತ ಪ್ರತ್ಯುತ್ತರ ಬರುತ್ತಿಲ್ಲ. ಹೀಗಾಗಿ ಬಾರ್ ಅಸೋಸಿಯೇಶನ್ನ ಗಮನಕ್ಕೆ ತರಲಾಗಿದೆ ಎಂದರು.
ಕಳೆದ ಡಿಸೆಂಬರ್ನಲ್ಲಿ 4341 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ 3729 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅಲ್ಲದೇ ಪರಿಹಾರ ಮೊತ್ತ 17.31 ಕೋಟಿ ಪರಿಹಾರವನ್ನೂ ವಿತರಿಸಲಾಗಿದೆ ಎಂದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶ ನೀಡಲಾಗುವುದು. ಪ್ರಕರಣದ ಇತ್ಯರ್ಥಕ್ಕೆ ಉಭಯ ಕಕ್ಷಿದಾರರ ಉಪಸ್ಥಿತಿ ಕಡ್ಡಾಯವಾಗಿದೆ. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನಗೊಳ್ಳುವುದಿಂದ ಸೌಹಾರ್ದತೆ ಉಳಿಯಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಉಪಸ್ಥಿತರಿದ್ದರು.