ಮಾ. 17: ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮತ್ತು ಉದ್ಯೋಗ ಮೇಳ
ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮಾನ್ಯ ಬಿಲ್ಲಾಡಿ, ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗೀಯ ಕಚೇರಿ ಮೈಸೂರು ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳವು ಮಾ. 17ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ನಲ್ಲಿ ನಡೆಯಲಿದೆ ಎಂದು ನ್ಯಾಶನಲ್ ಅಪ್ರೆಂಟಿಸ್ ಶಿಪ್ ಹಾಗೂ ಉದ್ಯೋಗ ಮೇಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘುಪತಿ ಭಟ್ ಹೇಳಿದರು.
ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ಬೆಳಗ್ಗೆ 9.30ಕ್ಕೆ ಮೂಡಬಿದ್ರೆ ಆಳ್ವಾಸ್ ಎಜ್ಯುಕೇಶನಲ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ಕನ್ಯಾನ ಶ್ರೀರಾಮಕ್ಷೇತ್ರದ ಮಹಾಮಂಡಳೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಅಧ್ಯಕ್ಷ ಸೂರ್ಯಕಾಂತ ಜೆ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಭಾಗವಹಿಸಲಿದ್ದಾರೆ ಎಂದರು.
ಬೆಳಗ್ಗೆ 9 ಗಂಟೆಯಿಂದ ನೋಂದಣಿ ಪ್ರಕ್ರಿಯೆಗಳು ಆರಂಭವಾಗಲಿದೆ. ಈಗಾಗಲೇ 1200 ಮಂದಿ ಆನ್ಲೈನ್ ನೋಂದಣಿ ಮಾಡಿಕೊಂಡಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ 10.30ರಿಂದ ಉದ್ಯೋಗ ಮೇಳ ನಡೆಯಲಿದ್ದು, 100 ಕಂಪನಿಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ ಟ್ರಸ್ಟಿ ಪ್ರವೀಣ್ ಪೂಜಾರಿ, ಕೋಶಾಧಿಕಾರಿ ನಾರಾಯಣ್, ಖಜಾಂಚಿ ಭಾಸ್ಕರ್ ಸುವರ್ಣ ಹಾಗೂ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗಣನಾಥ್ ಎಕ್ಕಾರ್ ಮೊದಲಾದವರು ಉಪಸ್ಥಿತರಿದ್ದರು.