ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ
Monday, March 16, 2026
ಕಟಪಾಡಿ ಬಳಿ ಹೆಚ್ ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದು, ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ನೀಡಲಾಗಿದೆ.
ಮಂಗಳೂರು ಉಡುಪಿ ಮಾರ್ಗದ ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ, ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಯಾವುದೇ ಅಪಾಯವಾಗದಂತೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ . ಮಾರ್ಚ್ 16ರಂದು ರಾತ್ರಿ 8.00 ಗಂಟೆಯವರೆಗೆ ಈ ಕೆಳಗಿನಂತೆ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ ಹೊರಡಿಸಲಾಗಿದೆ.
ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ-ಮೂಡುಬೆಳ್ಳಿ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗುವುದು ಅಥವಾ ಪಡುಬಿದ್ರೆ-ಬೆಳ್ಳಣ್-ಶಿರ್ವಾ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪುವುದು.
ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ-ಮೂಡುಬೆಳ್ಳೆ ಶಿರ್ವಾ ಮಾರ್ಗವಾಗಿ ಕಾವು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳುವುದು ಅಥವಾ ಮಣಿಪಾಲದಿಂದ ಶಿರ್ವಾ-ಬೆಳ್ಳಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸುವುದು.
ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಸ್ವರೂಪ ಅವರು ಆದೇಶ ಹೊರಡಿಸಿದ್ದಾರೆ.
