ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಯುವ ಉದ್ಯಮಿ
ಯುವ ಉದ್ಯಮಿಯೊಬ್ಬರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಗೂನಡ್ಕದಲ್ಲಿ ನಡೆದಿದೆ.
ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ಯುವ ಉದ್ಯಮಿ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಗೂನಡ್ಕದ ಲಾಡ್ಜ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ತಿಲಕರಾಜ್ ಅವರು ಮಾರ್ಚ್ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ತಮ್ಮ ಕಾರಿನಲ್ಲಿ ಕಲ್ಲಡ್ಕದಿಂದ ಮಡಿಕೇರಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಇವರು, ಶುಕ್ರವಾರ ಸಂಜೆ ಗೂನಡ್ಕದ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.
ಶನಿವಾರ ಬೆಳಿಗ್ಗೆ ಬಹಳ ಹೊತ್ತಾದರೂ ಅವರು ಉಳಿದುಕೊಂಡಿದ್ದ ಕೊಠಡಿಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಕೊಠಡಿಯ ಒಳಪ್ರವೇಶಿಸಿದಾಗ ತಿಲಕರಾಜ್ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.