ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾಣಿಕೆ ಡಬ್ಬಿ ವಿತರಣೆ (video)
Monday, March 16, 2026
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಮನೆ ಮನೆಗೆ ಕಾಣಿಕೆ ಡಬ್ಬಿ ವಿತರಣೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನದ ವಠಾರದಲ್ಲಿ ನಡೆಯಿತು.
ಸಮಾರಂಭದಲ್ಲಿ ಊರಿನ ಭಕ್ತರಿಗೆ ಸಾಂಕೇತಿಕವಾಗಿ ಕಾಣಿಕೆ ಡಬ್ಬಿಯನ್ನು ವಿತರಿಸಲಾಯಿತು. ಈ ವೇಳೆ ಮಾತನಾಡಿದ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ನಾಡೋಜ ಜಿ. ಶಂಕರ್, ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಎಲ್ಲರೂ ಕೈಜೋಡಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು.
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಇನ್ನಷ್ಟು ಭಗವದ್ಭಕ್ತರ ಸಹಕಾರದಿಂದ ಎಲ್ಲರೂ ಒಗ್ಗೂಡಿ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ವಿಜೃಂಭಣೆಯಿಂದ ಮಾಡಬೇಕು. ಈ ಪುಣ್ಯ ಕಾರ್ಯದಲ್ಲಿ ನಾವೆಲ್ಲರೂ ಒಟ್ಟಾಗಿ ಕೈಜೋಡಿಸಬೇಕು ಎಂದರು.
ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಸಂಸ್ಕಾರ ಸಂಸ್ಕೃತಿ ಉಳಿಯಬೇಕಾದರೆ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಬೇಕು. ಅತ್ಯಂತ ಪುರಾತನ ದೇಗುಲಗಳಲ್ಲಿ ಒಂದಾದ ಬನ್ನಂಜೆ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ಆಗುತ್ತಿರುವುದು ಸಂತಸ ತಂದಿದೆ. ಕನ್ನರ್ಪಾಡಿ ಜಯದುರ್ಗೆಯ ಸನ್ನಿಧಾನದಿಂದ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅದ್ದೂರಿಯ ಹೊರೆಕಾಣಿಕೆ ಸಮರ್ಪಿಸಲಾಗುವುದು ಎಂದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಕರುಣಾಕರ್ ಪೂಜಾರಿ, ಮಾಜಿ ನಗರಸಭಾ ಸದಸ್ಯ ಪಿ.ಜಿ ಹೆಗ್ಡೆ ಮೊದಲಾದವರು ಇದ್ದರು.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ನಿರೂಪಿಸಿ, ವಂದಿಸಿದರು.

