-->
ಉಡುಪಿ ಅಗ್ನಿ ಅವಘಡ ನಡೆದ ಸ್ಥಳಕ್ಕೆ ಶಾಸಕ ಯಶ್ಪಾಲ್ ಭೇಟಿ

ಉಡುಪಿ ಅಗ್ನಿ ಅವಘಡ ನಡೆದ ಸ್ಥಳಕ್ಕೆ ಶಾಸಕ ಯಶ್ಪಾಲ್ ಭೇಟಿ


ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಶೀಲ್ದಾರ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ಘಟನೆಯ ಬಗ್ಗೆ ಸ್ಥಳೀಯ ವರ್ತಕರಿಂದ ಮಾಹಿತಿ ಪಡೆದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿಯ ನಗರದಲ್ಲಿ ಬಹುದೊಡ್ಡ ಅಗ್ನಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ರಾಜ್ಯ ಸರ್ಕಾರ ತಕ್ಷಣ ವಿಶೇಷ ಪ್ರಕರಣದಡಿ 10 ಕೋಟಿ ಪರಿಹಾರ ನೀಡುವಂತೆ ಆಗ್ರಹಿಸುವುದಾಗಿ ತಿಳಿಸಿದರು.

ಅಗ್ನಿಶಾಮಕ ದಳ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದೆ ಈ ಬಗ್ಗೆಯೂ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗುವುದು. ಉಡುಪಿ ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗಿದ್ದು, ಈಗಾಗಲೇ ಪ್ರಗತಿಯಲ್ಲಿರುವ ಮಣಿಪಾಲ ಅಗ್ನಿಶಾಮಕ ದಳದ ಕಾಮಗಾರಿ ಪೂರ್ಣಗೊಳಿಸಿ ಸೇವೆಗೆ ಒದಗಿಸಲು ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಪೌರಾಯುಕ್ತರಾದ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article