ಮುನಿಯಾಲಿನಲ್ಲಿ ಕಾರು ಪಲ್ಟಿ: ಏಳು ಮಂದಿ ಪಾರು
Monday, May 18, 2026
ಧರ್ಮಸ್ಥಳದಿಂದ ಕಾರ್ಕಳ ಮಾರ್ಗವಾಗಿ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಹೆಬ್ರಿ ತಾಲೂಕಿನ ಮುನಿಯಾಲಿನಲ್ಲಿ ಭಾನುವಾರ ಸಂಜೆ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇಬ್ಬರು ಪುರುಷರು, ಮೂವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಏಳು ಮಂದಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುನಿಯಾಲಿನ ಮಂಜುನಾಥ ಪೈ ಅವರ ಮನೆಯ ಸಮೀಪದ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ಹೊಡೆತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಘಟನೆಯ ಸುದ್ದಿ ತಿಳಿದು ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವು ನೀಡಿದರು. ಬಳಿಕ ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಕಾರನ್ನು ಮೇಲಕ್ಕೆತ್ತಲಾಯಿತು. ಅಪಘಾತದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.