ಉಡುಪಿ: ಗ್ಯಾಸ್ ಸಿಲಿಂಡರ್ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಾಣಿಜ್ಯ ಸಿಲಿಂಡರ್ ಏರಿಕೆಯಿಂದ ಹೋಟೆಲ್ ಮಾಲೀಕರಿಗೆ ಮಾತ್ರವಲ್ಲ ಜನಸಾಮಾನ್ಯರಿಗೂ ತೊಂದರೆ ಆಗಿದೆ. ಬಿಜೆಪಿ ತನ್ನ ಪೊಳ್ಳು ಭರವಸೆ, ಕುಟಿಲ ನೀತಿಯ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ತಕ್ಷಣ ದೇಶದಲ್ಲಿ ಬೆಲೆ ಏರಿಕೆ ಮಾಡುವ ಮೂಲಕ ಜನರ ಮೇಲೆ ಪ್ರಹಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಣ್ಣ ಉದ್ದಿಮೆದಾರರ ಮೇಲೆ ಪ್ರಹಾರ ಮಾಡಿದ್ದಲ್ಲದೇ, ಜನಸಾಮಾನ್ಯರನ್ನು ಬಡತನಕ್ಕೆ ದೂಡುವ ಪ್ರಯತ್ನ ಮಾಡಿದೆ. ದೇಶದಲ್ಲಿ ಅಘೋಷಿತ ಕರ್ಫ್ಯೂ ಹಾಕುವ ಪ್ರಯತ್ನ ನಡೆಯುತ್ತಿದೆ. ಕೇಂದ್ರ ಸರ್ಕಾರವು ಬೆಲೆ ಏರಿಕೆ ಮಾಡಿರುವುದನ್ನು ತಕ್ಷಣ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಿಂದ ಹಲವು ಹೋಟೆಲ್ ಗಳು ಮುಚ್ಚಿದ್ದು, ಹೊಟೇಲ್ ಗಳಲ್ಲಿ ಕೆಲಸ ಮಾಡುವ ಅನೇಕ ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ. ಇದನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷವು ಆಂದೋಲನ ರೀತಿಯಲ್ಲಿ ಮಾಡಿ ಜನಸಾಮಾನ್ಯರ ಗಮನಕ್ಕೆ ತರುವ ಪ್ರಯತ್ನ ಮಾಡುತಿದ್ದೇವೆ ಎಂದರು.
ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಅಲೆವೂರು ಹರೀಶ್ ಕಿಣಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ , ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರಿಪ್ರಸಾದ್ ರೈ, ಮಹಿಳಾ ಮುಖಂಡೆ ಜ್ಯೋತಿ ಹೆಬ್ಬಾರ್, ಶಬರೀಶ್ ಸುವರ್ಣ, ಸುರಯ್ಯ ಅಂಜುಮ್, ಸಜ್ಜನ್ ಶೆಟ್ಟಿ, ನವೀನ್ ಸಾಲ್ಯಾನ್, ಅಕ್ಷತ್ ಪೈ ಮೊದಲಾದವರು ಭಾಗವಹಿಸಿದ್ದರು.
