ಪಂಚರಾಜ್ಯ ಚುನಾವಣೆ ಫಲಿತಾಂಶ: ಬಿಜೆಪಿ ಕಾರ್ಯಕರ್ತರ ಶ್ರಮಕ್ಕೆ ವಿ. ಸುನಿಲ್ ಕುಮಾರ್ ಅಭಿನಂದನೆ
Monday, May 04, 2026
ಪಶ್ಚಿಮ ಬಂಗಾಳವನ್ನು ಸುದೀರ್ಘ ಕಾಲದಿಂದ ಕಾಡುತ್ತಿದ್ದ ಅರಾಜಕತೆಗೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದಾರೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸು ಇಂದು ನನಸಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ತಮ್ಮ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ ಅವರು, ಬಾಂಗ್ಲಾದೇಶದ ಮತಾಂಧರಿಗೆ ದೇಶದ ಹೆಬ್ಬಾಗಿಲು ತೆರೆದು ಅವರನ್ನು ಮತಬ್ಯಾಂಕ್ ಆಗಿಸಿಕೊಂಡು ದಬ್ಬಾಳಿಕೆ ನಡೆಸುತ್ತಿದ್ದ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನಿರಂತರ ಪ್ರಯತ್ನದಿಂದ ತೃಣಮೂಲ ಕಾಂಗ್ರೆಸ್ನ ಗೂಂಡಾಗಿರಿ ರಾಜಕಾರಣಕ್ಕೆ ಅಂತ್ಯ ಕಂಡಿದೆ. ಅಸ್ಸಾಂನಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಿರುವುದನ್ನೂ, ಪುದುಚೇರಿಯಲ್ಲಿ ಎನ್ಡಿಎ ದಾಖಲಿಸಿದ ಗೆಲುವನ್ನೂ ಅವರು ಪ್ರಶಂಸಿಸಿದರು.
“ಟ್ಟಾರೆ ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಕಾರಣರಾದ ಪಕ್ಷದ ಕಾರ್ಯಕರ್ತರ ಅವಿರತ ಶ್ರಮ ಶ್ಲಾಘನೀಯ. ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.