ದೇಶದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ನೇಮಕ
Saturday, May 09, 2026
ದೇಶದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ನೇಮಕ ಮಾಡಲಾಗಿದೆ. ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ನೌಕಾಪಡೆಯ ಮುಖ್ಯಸ್ಥರಾಗಿ ನಿಯೋಜಿತರಾಗಿದ್ದಾರೆ.
ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರು ಭಾರತ ಸರ್ಕಾರದ ಮಿಲಿಟರಿ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಹಾಲಿ ಸಿಡಿಎಸ್ ಆಗಿರುವ ಜನರಲ್ ಅನಿಲ್ ಚೌಹಾಣ್ ಅವರ ಆಡಳಿತಾವಧಿ ಈ ತಿಂಗಳ 30ರಂದು ಕೊನೆಗೊಳ್ಳಲಿದೆ.ಸುಬ್ರಮಣಿಯವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ವರ್ಷದ ಸೆಪ್ಟೆಂಬರ್ 1ರಂದು ಅವರು ಅಧಿಕಾರ ವಹಿಸಿಕೊಂಡಿದ್ದರು. ಅದಕ್ಕೂ ಮುನ್ನ, 2024ರ ಜುಲೈ 1ರಿಂದ 2025ರ ಜುಲೈ 31ರವರೆಗೆ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಹಾಗೂ 2023ರ ಮಾರ್ಚ್ನಿಂದ 2024ರ ಜೂನ್ವರೆಗೆ ಸೆಂಟ್ರಲ್ ಕಮಾಂಡ್ನ ಜನರಲ್ ಆಫೀಸರ್ ಕಮಾಂಡರ್-ಇನ್-ಚೀಫ್ ಆಗಿ ಕಾರ್ಯ ನಿರ್ವಹಿಸಿದ್ದರು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ವೇಳೆ ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರಿಗೆ ಹಲವು ಸೇನಾ ಗೌರವಗಳು ಸಂದಿವೆ. ಇದರಲ್ಲಿ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಹಾಗೂ ವಿಶಿಷ್ಟ ಸೇವಾ ಪದಕಗಳು ಸೇರಿವೆ.