ಡೆಬಿಟ್ ಕಾರ್ಡ್ ಮೂಲಕ ಸೈಬರ್ ವಂಚನೆ: ಖಾತೆಯಿಂದ ರೂ. 2.12 ಲಕ್ಷ ರೂ. ಕಳವು
ಡೆಬಿಟ್ ಕಾರ್ಡ್ ಬಳಕೆ ಮಾಡಿದ ಬಳಿಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ರೂ. 2.12 ಲಕ್ಷಕ್ಕೂ ಅಧಿಕ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಉಡುಪಿ ಪೊಲೀಸರಿಗೆ ದೂರು ನೀಡಲಾಗಿದೆ.
ಸುರೇಶ್ ರಾವ್ ಅವರು ಜೂನ್ 3ರಂದು ಮಣಿಪಾಲದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆಯ ಬಿಲ್ ಅನ್ನು ಡೆಬಿಟ್ ಕಾರ್ಡ್ ಮೂಲಕ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ ಎಂದು ತಿಳಿದುಬಂದಿದೆ.
ಆದರೆ ಜೂನ್ 8ರಂದು ಅವರ ಮೊಬೈಲ್ಗೆ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಂಡಿರುವ ಕುರಿತು ಸಂದೇಶ ಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅವರು ಬ್ಯಾಂಕ್ಗೆ ತೆರಳಿ ಖಾತೆಯ ವ್ಯವಹಾರಗಳ ವಿವರ ಪರಿಶೀಲಿಸಿದ್ದಾರೆ. ಈ ವೇಳೆ ಜೂನ್ 5ರಿಂದ ಜೂನ್ 8ರ ನಡುವಿನ ಅವಧಿಯಲ್ಲಿ ಅವರ ಗಮನಕ್ಕೆ ಬಾರದೇ ಒಟ್ಟು ರೂ. 2,12,497 ಹಣವನ್ನು ಅಪರಿಚಿತ ಖಾತೆಗಳಿಗೆ ವರ್ಗಾಯಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಸುರೇಶ್ ರಾವ್ ಅವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೆಬಿಟ್ ಕಾರ್ಡ್ ಮಾಹಿತಿ ದುರ್ಬಳಕೆ ಅಥವಾ ಸೈಬರ್ ವಂಚನೆಯ ಸಾಧ್ಯತೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
ಸಾರ್ವಜನಿಕರು ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು. ಅಪರಿಚಿತ ಲಿಂಕ್ಗಳನ್ನು ಕ್ಲಿಕ್ ಮಾಡದಂತೆ, ಒಟಿಪಿ ಹಾಗೂ ಬ್ಯಾಂಕ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಪೊಲೀಸರು ಸಲಹೆ ನೀಡಿದ್ದಾರೆ.