ಜೂ.26: ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನೆ
ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ 90 ಶೇಕಡಾ ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆಯು ಕಳೆದ ಏಳೆಂಟು ವರ್ಷದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿ ಸುಮಾರು 1200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪ್ರಶಸ್ತಿ ಪತ್ರ, ಒಂದು ಸಾವಿರ ನಗದು ಪುರಸ್ಕಾರವಿರಲಿದೆ. ಕಾರ್ಯಕ್ರಮವನ್ನು ಮಾಜಿ ಸಚಿವ ಡಾ. ಪಿ.ಜಿ ಆರ್ ಸಿಂಧ್ಯ ಉದ್ಘಾಟಿಸಲಿದ್ದಾರೆ. ಶಿರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಆರೋಗ್ಯ ಸಚಿವ ಯು.ಟಿ ಖಾದರ್ ಅದ್ಯಕ್ಷತೆ ವಹಿಸಲಿದ್ದಾರೆ ಎಂದರು.
ಜೂ. 27ರಿಂದ ಜೂ. 29ರವರೆಗೆ ರಾಜ್ಯ ಮಟ್ಟದ ವಿಶೇಷ ಶಿಬಿರ "ಏಕತ" ಸಾಮಾಜಿಕ ಸಾಮರಸ್ಯ ಶಿಬಿರವು ವಿಜಯ ಮಕ್ಕಳ ಕೂಟ ಅತ್ರಾಡಿ ವಂಡ್ಲೆ ಇಲ್ಲಿ ನಡೆಯಲಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ, ಜೆ.ಪೈ , ಜಿಲ್ಲಾ ಕಾರ್ಯದರ್ಶಿ ಆನಂದ ಬಿ. ಆಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ ಹಾಗೂ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ ಶೇಖರ್ ಉಪಸ್ಥಿತರಿದ್ದರು.