ಹೊಳೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲು: ಮುಂದುವರಿದ ಶೋಧ
ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಮ್ತಾಡಿಯ ಸುಳಿಗುಂಡಿ ಹಿರೇಹೊಳೆಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಾಪತ್ತೆಯಾದ ವಿದ್ಯಾರ್ಥಿಯನ್ನು ಗರಿಕೆಮಠ ನಿವಾಸಿಗಳಾದ ನಾಗರಾಜ್ ಮತ್ತು ಶಿವಗಾಮಿ ದಂಪತಿಯ ಪುತ್ರ ಸಾಮರಾಜ್ (21) ಎಂದು ಗುರುತಿಸಲಾಗಿದೆ. ಸಾಮರಾಜ್ ಸ್ಥಳೀಯ ಇಸಿಆರ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದರು.
ಸ್ನೇಹಿತರೊಂದಿಗೆ ಶನಿವಾರ ಸಂಜೆ ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿದ್ದ ವೇಳೆ ಸಾಮರಾಜ್ ಕಾಲುಜಾರಿ ನೀರಿನಲ್ಲಿ ಬಿದ್ದಿದ್ದು, ಕ್ಷಣಾರ್ಧದಲ್ಲೇ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ಹಲವಾರು ಗಂಟೆಗಳ ಕಾಲ ಹುಡುಕಾಟ ನಡೆಸಿದರೂ ವಿದ್ಯಾರ್ಥಿಯ ಸುಳಿವು ಪತ್ತೆಯಾಗಲಿಲ್ಲ. ಕತ್ತಲೆ ಆವರಿಸಿದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಇದೀಗ ಭಾನುವಾರ ಮುಂಜಾನೆಯಿಂದಲೇ ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ಅವರ ತಂಡ ಸ್ಥಳೀಯರ ಸಹಕಾರದೊಂದಿಗೆ ನದಿಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.