ಸರ್ಕಾರಿ ನೌಕರರಿಗೆ ಸಮಯ ಪಾಲನೆ ವಿಚಾರ:ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿ- ಯಶ್ಪಾಲ್ ಸುವರ್ಣ ಟೀಕೆ
Sunday, June 14, 2026
ರಾಜ್ಯ ಸರ್ಕಾರವು ಅಧಿಕಾರಿಗಳು ಮತ್ತು ನೌಕರರಿಗೆ ಬೆದರಿಕೆ ಹಾಕುವ ಬದಲು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ಪರಿಹರಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಲಹೆ ನೀಡಿದ್ದಾರೆ.
ಸರ್ಕಾರಿ ನೌಕರರಿಗೆ ಸಮಯ ಪಾಲನೆ ಕಡ್ಡಾಯಗೊಳಿಸುವ ಕ್ರಮಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಶಾಸಕ ಯಶಪಾಲ್ ಸುವರ್ಣ, ಸರ್ಕಾರದ ನಿಯಮಾವಳಿ ಪ್ರಕಾರ ಕಚೇರಿಗಳ ಕಾರ್ಯಾವಧಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಗದಿಯಾಗಿರುವುದು ಹೊಸ ವಿಷಯವಲ್ಲ. ಈ ನಿಯಮ ಹಲವು ವರ್ಷಗಳಿಂದ ಜಾರಿಯಲ್ಲಿದ್ದು, ಸರ್ಕಾರಿ ನೌಕರರು ಸಮಯ ಪಾಲನೆ ಮಾಡುತ್ತಿಲ್ಲ ಎನ್ನುವುದಾದರೆ ಅದು ಸರ್ಕಾರದ ಆಡಳಿತ ವೈಫಲ್ಯ ಮತ್ತು ಮುಖ್ಯಮಂತ್ರಿಗಳ ನಿರ್ಲಕ್ಷ್ಯವನ್ನು ಸೂಚಿಸುತ್ತದೆ ಎಂದು ಹೇಳಿದರು.
ಸರ್ಕಾರವು ಅಧಿಕಾರಿಗಳು ಮತ್ತು ನೌಕರರಿಗೆ ಬೆದರಿಕೆ ಹಾಕುವ ಬದಲು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ಪರಿಹರಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರಾವಳಿ ಭಾಗಕ್ಕೆ ಭೇಟಿ ನೀಡಿ, ಕಳೆದ ಮೂರು ವರ್ಷಗಳಲ್ಲಿ ಪ್ರಕೃತಿ ವಿಕೋಪಗಳಿಂದ ಉಂಟಾದ ಹಾನಿಗೆ ಸಂಬಂಧಿಸಿದ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜನರ ಸಮಸ್ಯೆಗಳನ್ನು ಬಗೆಹರಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಯಾವ ಕೆಲಸ ಆಗಬೇಕೋ ಅದರ ಕಡೆ ಮುಖ್ಯಮಂತ್ರಿ ಗಮನ ಹರಿಸಲಿ. ಕರಾವಳಿ ಭಾಗದ ಜನರು ಪ್ರಕೃತಿ ವಿಕೋಪಗಳಿಂದ ಸಂಕಷ್ಟ ಅನುಭವಿಸುತ್ತಿದ್ದು, ಪರಿಹಾರ ವಿತರಣೆಯಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.