ಅರಾಟೆ ಹಳೆ ಸೇತುವೆ ಕಾಮಗಾರಿಯ ತಾತ್ಕಾಲಿಕ ತಡೆ ಕುಸಿತ: ಸುರಕ್ಷತಾ ಕ್ರಮಕ್ಕೆ ಸಂಸದ ಬಿ.ವೈ ರಾಘವೇಂದ್ರ ಸೂಚನೆ
ಕುಂದಾಪುರ–ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮುಳ್ಳಿಕಟ್ಟೆ ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ನಡೆಯುತ್ತಿರುವ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ತಗಡು ಶೀಟುಗಳು ಸೋಮವಾರ ಸುರಿದ ಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ.
ಸೇತುವೆ ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಹಿಂದಿನ ಡಿವೈಡರ್ ಬಳಿಯ ತಿರುವಿನ (ಡೈವರ್ಶನ್) ಭಾಗದಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ, ಕನ್ನಡಕುದ್ರು ಭಾಗದಿಂದ ಅರಾಟೆ ಸೇತುವೆ ಕಾಮಗಾರಿ ನಡೆಯುತ್ತಿರುವ ಡಿವೈಡರ್ ಮೇಲೆ ತಗಡು ಶೀಟುಗಳ ಮೂಲಕ ತಾತ್ಕಾಲಿಕ ತಡೆ ನಿರ್ಮಿಸಲಾಗಿತ್ತು. ಆದರೆ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಈ ತಗಡು ಶೀಟುಗಳ ಬಹುತೇಕ ಭಾಗ ಕಾಮಗಾರಿ ಪ್ರದೇಶದತ್ತ ಉರುಳಿ ಬಿದ್ದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.
ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.
ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಸುರಕ್ಷತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.