ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ : ಶಾಸಕ ಯಶ್ಪಾಲ್ ಸುವರ್ಣ ಟೀಕೆ
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಅದರ ಬಗ್ಗೆ ಜನರಿಗೆ ಉತ್ತರ ನೀಡಲು ಮುಖ್ಯಮಂತ್ರಿಗೆ ಸಾಧ್ಯವಾಗುತ್ತಿಲ್ಲ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಟೀಕಿಸಿದರು.
ಗೃಹಲಕ್ಷ್ಮೀ–ಗೃಹಜ್ಯೋತಿ ಮರುಅರ್ಜಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಉಡುಪಿಯಲ್ಲಿ ವಾಗ್ದಾಳಿ ನಡೆಸಿದ ಯಶ್ಪಾಲ್ ಸುವರ್ಣ , ಸರ್ಕಾರವೇ ರಚಿಸಿದ ಗ್ಯಾರೆಂಟಿ ಸಮಿತಿಗಳ ಅಧ್ಯಕ್ಷರು ಮೂರು ವರ್ಷಗಳಿಂದ ಕೆಲಸ ಮಾಡಿದ್ದರೂ, ಈಗ ಅವರ ಮೇಲೆಯೇ ಮುಖ್ಯಮಂತ್ರಿ ಅನುಮಾನ ವ್ಯಕ್ತಪಡಿಸುತ್ತಿರುವುದು ಆಶ್ಚರ್ಯಕರ ಬೆಳವಣಿಗೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸವನ್ನು ಉಪ ಮುಖ್ಯಮಂತ್ರಿ ಡಿ. ಕೆ . ಶಿವಕುಮಾರ್ ಮಾಡುತ್ತಿದ್ದಾರೆ. ಇಲ್ಲಸಲ್ಲದ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಯೋಜನೆಗಳ ಫಲಾನುಭವಿಗಳನ್ನು ಬೀದಿಗೆ ತಳ್ಳುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಅದರ ಬಗ್ಗೆ ಜನರಿಗೆ ಉತ್ತರ ನೀಡಲು ಮುಖ್ಯಮಂತ್ರಿಗೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದ ಅವರು, ಮುಖ್ಯಮಂತ್ರಿಗಳು ನೇರವಾಗಿ ಮರವನ್ನು ಕಡಿಯುತ್ತಿಲ್ಲ. ಆದರೆ ಗೆಲ್ಲುಗಳನ್ನು ಕಡಿದು ಕಡಿದು ಮರವೇ ಉರುಳುವಂತೆ ಮಾಡುವ ಕೆಲಸವನ್ನು ಡಿ.ಕೆ. ಶಿವಕುಮಾರ್ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಸರ್ಕಾರದ ನಿಜವಾದ ಆರ್ಥಿಕ ಸ್ಥಿತಿಯನ್ನು ಮುಖ್ಯಮಂತ್ರಿ ಜನರ ಮುಂದಿಡಬೇಕು ಎಂದು ಅವರು ಆಗ್ರಹಿಸಿದರು.