ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ: ರೋಗಿಯ ಪುತ್ರನ ವಿರುದ್ಧ ಪ್ರಕರಣ
Tuesday, June 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ರೋಗಿಯ ಪುತ್ರನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಡಿಂಬಾಳದ ಕೇವಳ ನಿವಾಸಿ ಗೋವರ್ಧನ ಗೌಡ ಪ್ರಕರಣದ ಆರೋಪಿ. ಗೋವರ್ಧನ ಗೌಡ ಅವರ ತಂದೆ ಶಾಂತರಾಮ ಗೌಡ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 25ರಂದು ಶಾಂತರಾಮ ಗೌಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕರ್ತವ್ಯದಲ್ಲಿದ್ದ ವೈದ್ಯ ಡಾ. ಯೋಗೀಶ್ ಕೆ ಅವರು ರೋಗಿಯ ಸಂಬಂಧಿಕರಿಗೆ ಸೂಚನೆ ನೀಡಿದ್ದರು.
ಈ ವೇಳೆ ಗೋವರ್ಧನ ಗೌಡ ಅವರು ವೈದ್ಯರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ವಾಗ್ವಾದ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಆಸ್ಪತ್ರೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಡಾ. ಯೋಗೀಶ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆಗೆ ಅಡ್ಡಿಪಡಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.