ಉಡುಪಿ, ದ.ಕ ಜಿಲ್ಲೆಯಲ್ಲಿ ಭೋವಿ ಜನಾಂಗಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ: ಪ್ರತಿಭಟನೆಯ ಎಚ್ಚರಿಕೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ಸಿಗದೇ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಸರ್ಕಾರದ ಸೌಲಭ್ಯಗಳಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಸೂಕ್ತ ಸ್ಪಂದನೆ ನೀಡಬೇಕೆಂದು ಭೋವಿ ಜನಾಂಗದ ಮುಖಂಡ ಪವನ್ ಕುಮಾರ್ ಒತ್ತಾಯಿಸಿದ್ದಾರೆ.
ಕರ್ನಾಟಕದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಭೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 70,000 ಜನ ವಾಸವಾಗಿದ್ದು, ತಾಂತ್ರಿಕ ಕಾರಣಗಳನ್ನು ನೀಡಿ ಜಾತಿ ಪ್ರಮಾಣ ಪತ್ರ ನೀಡಲು ನಿರಾಕರಿಸಲಾಗುತ್ತಿದೆ.
ಕೆಲವು ಕಡೆಗಳಲ್ಲಿ ಅಧಿಕಾರಿಗಳು ಅನಗತ್ಯ ದಾಖಲೆಗಳನ್ನು ಕೇಳಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪವನ್ ಕುಮಾರ್, ಸಂವಿಧಾನ ಬದ್ಧವಾಗಿ ಭೋವಿ ಜನಾಂಗವು ಪರಿಶಿಷ್ಟ ಜಾತಿಯ ಮೀಸಲಾತಿ ಪಟ್ಟಿಯಲ್ಲಿದ್ದು 1950 ರಿಂದ ಪರಿಶಿಷ್ಟ ಜಾತಿಯಡಿ ಪ್ರಮಾಣ ಪತ್ರ ನೀಡಲಾಗುತ್ತಿತ್ತು. ಆದರೆ ಕಳೆದ ಏಳೆಂಟು ವರ್ಷದಿಂದ ಅಧಿಕಾರಿಗಳು ಇದನ್ನು ನಿಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು ಕಾನೂನು ಸಮರಕ್ಕೂ ಮುಂದಾಗಿರುವುದಾಗಿ ತಿಳಿಸಿದರು.
ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡದೇ ಇರುವುದರಿಂದ ಒಂದನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಲು ತೊಂದರೆಯಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು. ಒಂದು ವಾರದೊಳಗೆ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ಭೋವಿ ಜನಾಂಗ ಆಹೋ ರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.