ಉದ್ಯಾವರ: ನದಿಗೆ ಹಾರಿ ಯುವಕ ಆತ್ಮಹತ್ಯೆ: ಹುಡುಕಾಟದ ಬಳಿಕ ಮೃತದೇಹ ಪತ್ತೆ
ಉಡುಪಿಯ ಉದ್ಯಾವರ ಪಾಪನಾಶಿನಿ ನದಿಯ ಸೇತುವೆಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ ವಾಹನ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ನದಿಯಲ್ಲಿ ಶೋಧ ಕಾರ್ಯ ನಡೆಸಲಾಯಿತು. ಸಂಜೆ ವೇಳೆಗೆ ಯುವಕನ ಶವ ಪತ್ತೆಯಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 5 ಗಂಟೆಗೆ ಬೋಳಾರುಗುಡ್ಡೆ ಮೈದಾನದಲ್ಲಿ ಕ್ರಿಕೆಟ್ ಆಡಲು ತೆರಳುವುದಾಗಿ ಮನೆಯಿಂದ ಹೊರಟಿದ್ದ ಹರ್ಷಿತ್ ಶೆಟ್ಟಿ ಬಳಿಕ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಸಂಪರ್ಕಿಸಲು ಯತ್ನಿಸಿದಾಗ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದ ವೇಳೆ ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಪು ಪೊಲೀಸರು ಹಾಗೂ ಸ್ಥಳೀಯರು ಯುವಕನ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡರು. ನದಿಯಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಹಲವು ಗಂಟೆಗಳ ಕಾಲ ಹುಡುಕಾಟ ನಡೆಸಲಾಗಿದ್ದು, ಕೊನೆಗೆ ಯುವಕನ ಮೃತದೇಹ ಪತ್ತೆಯಾಯಿತು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಹರ್ಷಿತ್ ಶೆಟ್ಟಿ ಅವರು ಮಲ್ಪೆಯಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.