-->
ಅಂಬಲಪಾಡಿ ಮೇಲ್ಸೇತುವೆಯ ಒಂದು ಪಾರ್ಶ್ವ ವಾಹನ ಸಂಚಾರಕ್ಕೆ ಮುಕ್ತ : ಸಂಸದ ಕೋಟ, ಶಾಸಕ ಯಶ್ಪಾಲ್ ಚಾಲನೆ

ಅಂಬಲಪಾಡಿ ಮೇಲ್ಸೇತುವೆಯ ಒಂದು ಪಾರ್ಶ್ವ ವಾಹನ ಸಂಚಾರಕ್ಕೆ ಮುಕ್ತ : ಸಂಸದ ಕೋಟ, ಶಾಸಕ ಯಶ್ಪಾಲ್ ಚಾಲನೆ


ಉಡುಪಿಯ ಅಂಬಲಪಾಡಿ ಮೇಲ್ಸೇತುವೆಯ ಮಂಗಳೂರು–ಕುಂದಾಪುರ ಮಾರ್ಗದ ಒಂದು ಪಾರ್ಶ್ವವನ್ನು ಇಂದು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶಪಾಲ್ ಸುವರ್ಣ ಸ್ಥಳದಲ್ಲಿದ್ದು ವಾಹನ ಸಂಚಾರಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಅಂಬಲಪಾಡಿ ಮೇಲ್ಸೇತುವೆಯಲ್ಲಿ ಕೆಲ ಸಣ್ಣಪುಟ್ಟ ಕಾಮಗಾರಿಗಳು ಇನ್ನೂ ಬಾಕಿ ಇದ್ದರೂ, ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಮಂಗಳೂರು–ಕುಂದಾಪುರ ಮಾರ್ಗದ ಒಂದು ಪಾರ್ಶ್ವವನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದರು.

ಇದರಿಂದ ಸರ್ವಿಸ್ ರಸ್ತೆಯ ಮೇಲಿನ ಒತ್ತಡ ಕಡಿಮೆಯಾಗಲಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದೇನೆ. ಸುಮಾರು 12 ದಿನಗಳೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಸಾರ್ವಜನಿಕರು ನೀಡಿದ ಸಹಕಾರಕ್ಕೆ ಧನ್ಯವಾದಗಳು ಎಂದು ಅವರು ಹೇಳಿದರು.

ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳ ನೇತೃತ್ವದ ವಿಶೇಷ ತಂಡವಿದ್ದು, ಸಾರ್ವಜನಿಕರು ಆ ತಂಡವನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಇದಲ್ಲದೆ, ನಾಳೆಯಿಂದ ಹೆದ್ದಾರಿಯ ಇನ್ನೊಂದು ಪಾರ್ಶ್ವವನ್ನೂ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಯೋಜನೆ ಇದೆ. ಬಳಿಕ ಹದಗೆಟ್ಟಿರುವ ಸರ್ವಿಸ್ ರಸ್ತೆ ಹಾಗೂ ಅಂಡರ್‌ಪಾಸ್ ಕಾಮಗಾರಿಯನ್ನು ಮುಂದಿನ ಎರಡು ದಿನಗಳಲ್ಲಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಅವರ ಸಹಕಾರವನ್ನೂ ಸಂಸದರು ಸ್ಮರಿಸಿ ಧನ್ಯವಾದ ಸಲ್ಲಿಸಿದರು.

ಇನ್ನೊಂದೆಡೆ, ಕಟಪಾಡಿ ಭಾಗದಲ್ಲಿ ಕುಂದಾಪುರಕ್ಕೆ ತೆರಳುವ ರಸ್ತೆಯ ಒಂದು ಬದಿಯನ್ನು ಈಗಾಗಲೇ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕೆಲವೆಡೆ ಮಣ್ಣು ಕುಸಿತದ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತಡೆಗೋಡೆ (ವಾಲ್) ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಯು ಉಡುಪಿ ನಗರಕ್ಕೆ ಹೊಸ ರೂಪ ನೀಡುವ ಮಹತ್ವದ ಯೋಜನೆಯಾಗಿದೆ. ಹಲವು ವರ್ಷಗಳಿಂದ ಸಾರ್ವಜನಿಕರು ಎದುರಿಸುತ್ತಿದ್ದ ವಾಹನ ದಟ್ಟಣೆ ಸಮಸ್ಯೆಗೆ ಈ ಮೇಲ್ಸೇತುವೆ ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಹೇಳಿದರು.

ಮೇಲ್ಸೇತುವೆಯ ಒಂದು ಭಾಗವನ್ನು ಸಂಚಾರಕ್ಕೆ ಮುಕ್ತಗೊಳಿಸಿರುವುದರಿಂದ ಈಗಾಗಲೇ ವಾಹನ ದಟ್ಟಣೆ ನಿಯಂತ್ರಣಕ್ಕೆ ಬಂದಿದೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಕುಂದಾಪುರ–ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

ಅಂಬಲಪಾಡಿ ಮೇಲ್ಸೇತುವೆಯ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಂಪೂರ್ಣ ಯೋಜನೆಯನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದರು.

Ads on article

Advertise in articles 1

advertising articles 2

Advertise under the article