ಉಡುಪಿ ತಾಯಿ ಮಕ್ಕಳ ಆಸ್ಪತ್ರೆಯ ಅಭಿವೃದ್ಧಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ: ಯಶ್ಪಾಲ್
ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ರೋಗಿಯ ಸಂಬಂಧಿಕರೊಬ್ಬರು ಅಧಿಕಾರಿಗಳ ಸಮ್ಮುಖದಲ್ಲೇ ಶಾಸಕರ ಗಮನಕ್ಕೆ ತಂದರು. ಆಸ್ಪತ್ರೆಯಲ್ಲಿ ಇಲಿ, ಜಿರಳೆ, ಸೊಳ್ಳೆ ಕಾಟದಿಂದ ರೋಗದ ಭೀತಿ ಎದುರಾಗಿದೆ. ಈ ಬಗ್ಗೆ ಗಮನಹರಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ತಾಯಿ ಮತ್ತು ಮಕ್ಕಳಿಗೆ ಆರೋಗ್ಯಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಪರಿಣಿತ ಇಂಜಿನಿಯರ್ರನ್ನು ಕರೆಸಿ ಆಸ್ಪತ್ರೆ ಕಟ್ಟಡದ ವಿನ್ಯಾಸ ಬದಲಾವಣೆಗೆ ನೀಲಾನಕ್ಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು. ಆಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು, ಸಿಬ್ಬಂದಿ ನೇಮಕಾತಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಉಡುಪಿ ಹಾಗೂ ಸುತ್ತಮುತ್ತಲಿನ ಬಡಜನರು ಈ ಆಸ್ಪತ್ರೆಯನ್ನೇ ಅವಲಂಬಿಸಿದ್ದು, ಇಲ್ಲಿನ ಸಮಸ್ಯೆಗಳಿಂದ ಆರೋಗ್ಯ ಸೇವೆ ಪಡೆಯಲು ತೊಂದರೆಯಾಗುತ್ತಿದೆ. ರೋಗಿಗಳಿಗೆ ಗುಣಮಟ್ಟದ ಹಾಗೂ ನುರಿತ ಸೇವೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಿಸಲಾದ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಆಸ್ಪತ್ರೆಯಲ್ಲಿ ಇಲಿ, ಜಿರಳೆ ಮತ್ತು ಸೊಳ್ಳೆಗಳ ಕಾಟದ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದು, ಆಸ್ಪತ್ರೆ ಆಡಳಿತವು ಆರೋಗ್ಯಕರ ವಾತಾವರಣ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
