ಹದಗೆಟ್ಟ ಮಣಿ ಬಚ್ಚಲು– ಹಂದಿಕಲ್ಲು ರಸ್ತೆ: ತುರ್ತು ದುರಸ್ಥಿಗೆ ಗ್ರಾಮಸ್ಥರ ಆಗ್ರಹ
Thursday, June 04, 2026
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣಿ ಬಚ್ಚಲು–ಹಂದಿಕಲ್ಲು ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ಪ್ರತಿದಿನ ಅಮೃತ ಭಾರತಿ, ಎಸ್ಆರ್ಎಸ್, ವಿಎಸ್ಎಸ್ ಹಾಗೂ ವಿಕಲಚೇತನ ಮಕ್ಕಳ ಶಾಲಾ ಬಸ್ಗಳು ಸಂಚರಿಸುತ್ತಿವೆ. ಅಲ್ಲದೆ ಕಾರ್ಖಾನೆಗಳಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ವಾಹನಗಳು, ಆಟೋರಿಕ್ಷಾಗಳು, ಕೃಷಿ ಕೂಲಿ ಕಾರ್ಮಿಕರು ಹಾಗೂ ನೂರಾರು ಸಾರ್ವಜನಿಕರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದರಿಂದ ವಾಹನ ಸವಾರರು ಹಾಗೂ ಪ್ರಯಾಣಿಕರು ಅಪಾಯದ ನಡುವೆ ಸಂಚರಿಸುವಂತಾಗಿದೆ.
ಮಂಡಾಡಿ ಜಡ್ಡು, ವಂಡಾರ್ಬೇಟ್ಟು ಹಾಗೂ ಚಾರ ಬಸದಿ ಪ್ರದೇಶಗಳನ್ನು ಸಂಪರ್ಕಿಸುವ ಈ ರಸ್ತೆ ಮಣಿಬಚ್ಚಲು–ಹಂದಿಕಲ್ಲು ಮಾರ್ಗವಾಗಿ ಸಂತೆಕಟ್ಟೆ, ನಲ್ಕೂರು ಹಾಗೂ ಮದ್ದೂರು ಭಾಗಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ಗ್ರಾಮೀಣ ಪ್ರದೇಶದ ಜನರ ದೈನಂದಿನ ಬದುಕಿಗೆ ಅತ್ಯಂತ ಅಗತ್ಯವಾಗಿದೆ.
ಹೀಗಾಗಿ ಈ ರಸ್ತೆಗೆ ತುರ್ತಾಗಿ ಮರು ಡಾಮರು ಹಾಕಿ ಕಾಮಗಾರಿ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಶಾಸಕರಾದ ವಿ. ಸುನಿಲ್ ಕುಮಾರ್ ಅವರು ವಿಶೇಷ ಅನುದಾನದಡಿ ಅಗತ್ಯ ಹಣ ಬಿಡುಗಡೆ ಮಾಡಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ರಸ್ತೆ ಅಭಿವೃದ್ಧಿಯಾದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಹಾಗಾಗಿ ತುರ್ತು ಡಾಮರೀಕರಣಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

.jpeg)