ಕಂಬಳ ಅಸೋಸಿಯೇಷನ್ನಿಂದ ಯುವಜನ ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಭೇಟಿ
Wednesday, June 24, 2026
ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಅಸೋಸಿಯೇಷನ್ನ ಪದಾಧಿಕಾರಿಗಳು ಬೆಂಗಳೂರಿನಲ್ಲಿ ರಾಜ್ಯ ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರನ್ನು ಭೇಟಿ ಮಾಡಿ, ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯಲಿರುವ 27 ಕಂಬಳಗಳ ಯಶಸ್ವಿ ಆಯೋಜನೆಗೆ ಇಲಾಖೆಯಿಂದ ಅಗತ್ಯ ಸಹಕಾರ ಮತ್ತು ಬೆಂಬಲ ನೀಡುವಂತೆ ಮನವಿ ಸಲ್ಲಿಸಿದರು.
ಭೇಟಿಯ ಸಂದರ್ಭದಲ್ಲಿ ಕಂಬಳದ ಸಾಂಸ್ಕೃತಿಕ, ಕ್ರೀಡಾ ಹಾಗೂ ಪರಂಪರೆಯ ಮಹತ್ವದ ಕುರಿತು ವಿಸ್ತೃತ ಚರ್ಚೆ ನಡೆಯಿತು. ರಾಜ್ಯದ ಜನಪದ ಕ್ರೀಡೆಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ಸರ್ಕಾರ ಹಾಗೂ ಕಂಬಳ ಸಂಘಟನೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಈ ವೇಳೆ ರಾಜ್ಯ ಕಂಬಳ ಅಸೋಸಿಯೇಷನ್ ಪರವಾಗಿ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ರಾಜ್ಯ ಕಂಬಳ ಅಸೋಸಿಯೇಷನ್ ಖಜಾಂಚಿಗಳಾದ ಲೋಕೇಶ್ ಶೆಟ್ಟಿ ಮುಚ್ಚೂರು, ಜಿಲ್ಲಾ ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಾಂತಾವರ ಹಾಗೂ ಸಂಘಟನೆಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
.jpeg)