ಶಿಥಿಲಗೊಂಡ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಪ್ರವೇಶ ದ್ವಾರ: ದುರಸ್ತಿಗೆ ಒತ್ತಾಯ
Tuesday, June 23, 2026
ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಪ್ರವೇಶ ದ್ವಾರದ ಮೇಲ್ಭಾಗದಲ್ಲಿ ಅಳವಡಿಸಿರುವ ಹೆಂಚುಗಳು ಹಾಗೂ ದೊಂಬೆ ಹಂಚುಗಳು ಚದುರಿಕೊಂಡು ಅಪಾಯವನ್ನು ಆಹ್ವಾನಿಸುತ್ತಿದೆ.
ರಥಬೀದಿಯಲ್ಲಿ ದಿನನಿತ್ಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಅನೇಕರು ದೇವಸ್ಥಾನದ ಹೊರಗಿನಿಂದಲೇ ನಮಸ್ಕರಿಸಿ ಮುಂದುವರಿಯುವ ಪರಿಪಾಠವಿದೆ. ಮಳೆ ಮತ್ತು ಗಾಳಿಯ ಪರಿಣಾಮವಾಗಿ ಸಡಿಲಗೊಂಡಿರುವ ಹೆಂಚುಗಳು ಕೆಳಗೆ ಬೀಳುವ ಸಾಧ್ಯತೆ ಇದ್ದು, ಭಕ್ತರ ಜೀವಕ್ಕೆ ಅಪಾಯ ಉಂಟಾಗುವ ಭೀತಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಪ್ರವೇಶ ದ್ವಾರದ ಮಾಡಿನ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
