ಎಸ್ಐಆರ್ ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ; ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ: ಮಂಜುನಾಥ್ ಭಂಡಾರಿ
Thursday, July 23, 2026
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಡೆದಂತೆಯೇ ಕರ್ನಾಟಕದಲ್ಲೂ ಯಾವುದೇ ರೀತಿಯ ಸಂಚು ಅಥವಾ ಅಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕಿನಿಂದ ಯಾವುದೇ ಅರ್ಹ ನಾಗರಿಕ ವಂಚಿತರಾಗಬಾರದು ಎಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಎಲ್ಲೆಲ್ಲಿ ಸಮಸ್ಯೆಗಳು ಕಂಡುಬರುತ್ತವೆಯೋ ಅಲ್ಲಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಓ) ಜೊತೆ ಪಕ್ಷದ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ನೆರವಾಗಬೇಕು ಎಂದು ಕರೆ ನೀಡಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದು ಅತ್ಯಂತ ಮುಖ್ಯವಾಗಿದೆ. ಜೊತೆಗೆ ಯಾವುದೇ ಅಕ್ರಮಗಳು ನಡೆಯದಂತೆ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ನಿಗಾ ವಹಿಸಿ, ಅಗತ್ಯವಿದ್ದಲ್ಲಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರಬೇಕು. ಪ್ರಜಾಪ್ರಭುತ್ವದ ಮೂಲಾಧಾರವಾದ ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ಮತದಾರನಿಗೂ ಸಿಗುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಮಂಜುನಾಥ್ ಭಂಡಾರಿ ಹೇಳಿದರು.