ಗೂಡ್ಸ್ ರಿಕ್ಷಾ- ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ
Tuesday, July 07, 2026
ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಬಳಿ ನಡೆದಿದೆ.
ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗ್ರಾಮದ ರವೀಂದ್ರ ಮೂಲ್ಯ (47) ಮೃತರು. ಅವರ ಸಹೋದರ ಜಗದೀಶ್ ಮೂಲ್ಯ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾರೆ ಕೆಲಸ ಮಾಡಿಕೊಂಡಿದ್ದ ರವೀಂದ್ರ ಮೂಲ್ಯ ಹಾಗೂ ಜಗದೀಶ್ ಮೂಲ್ಯ ಅವರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ವೇಣೂರಿನಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾ ನಿಟ್ಟಡೆಯ ಕುಂಭಶ್ರೀ ಶಾಲೆ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ತೀವ್ರತೆಗೆ ದ್ವಿಚಕ್ರ ವಾಹನ ಪಲ್ಟಿಯಾಗಿದ್ದು, ರವೀಂದ್ರ ಮೂಲ್ಯ ಅವರ ತಲೆಗೆ ಗಂಭೀರ ಗಾಯವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗದೀಶ್ ಮೂಲ್ಯ ಅವರ ಕಾಲುಗಳಿಗೆ ಬಲವಾದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.