ಶಾಸಕ ಯಶ್ಪಾಲ್ ಗೆ ಭಾಷೆಯ ಮೇಲೆ ಹಿಡಿತವಿರಬೇಕು– ಕೆ. ಜಯಪ್ರಕಾಶ್ ಹೆಗ್ಡೆ
Thursday, July 30, 2026
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ಬಳಸಿದ ಮಾತುಗಳು ಅವರ ಸ್ಥಾನಕ್ಕೆ ಗೌರವ ತರುವಂತದ್ದಲ್ಲ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಅವರು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಟೀಕೆ ಮಾಡುವ ಭರದಲ್ಲಿ ಜನಪ್ರತಿನಿಧಿಗಳು ಬಳಸುವ ಭಾಷೆಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಸಿದ್ಧಾಂತಗಳ ವಿಚಾರದಲ್ಲಿ ಹೋರಾಟ ನಡೆಸುವುದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಯಾವುದೇ ನಾಯಕನ ಕುರಿತು ಮಾತನಾಡುವಾಗ ಜನಪ್ರತಿನಿಧಿಗಳು ಭಾಷೆಯ ಮೇಲೆ ಹಿಡಿತ ಹೊಂದಿದ್ದು, ಗೌರವಯುತವಾಗಿ ಅಭಿಪ್ರಾಯ ವ್ಯಕ್ತಪಡಿಸಬೇಕು. ವಿಷಯಾಧಾರಿತ ಚರ್ಚೆಗಳೇ ನಡೆಯಬೇಕು. ವೈಯಕ್ತಿಕ ನಿಂದನೆ ಅಥವಾ ಅವಹೇಳನಾತ್ಮಕ ಹೇಳಿಕೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಅವರು ತಿಳಿಸಿದರು.ಶಾಸಕ ಯಶ್ಪಾಲ್ ಸುವರ್ಣ ಅವರು ತಾವು ಆಡಿದ ಮಾತುಗಳ ಬಗ್ಗೆ ಮರುಪರಿಶೀಲನೆ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದ ಹೆಗ್ಡೆ, ಮತದಾರರು ಕೂಡ ಇಂತಹ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಗಮನಿಸಿ ಜನಪ್ರತಿನಿಧಿಗಳ ನಡೆ-ನುಡಿಯನ್ನು ಮೌಲ್ಯಮಾಪನ ಮಾಡಬೇಕು ಎಂದು ಕರೆ ನೀಡಿದರು.