ಖ್ಯಾತ ಕಾದಂಬರಿಗಾರ್ತಿ ಸಿ.ಎನ್. ಮುಕ್ತಾ ನಿಧನ
ಕನ್ನಡದ ಖ್ಯಾತ ಲೇಖಕಿ ಹಾಗೂ ಕಾದಂಬರಿಗಾರ್ತಿ ಸಿ.ಎನ್. ಮುಕ್ತಾ ಅವರು ಶುಕ್ರವಾರ ಬೆಳಗಿನ ಜಾವ ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಅವಿವಾಹಿತರಾಗಿದ್ದ ಅವರು ಸೋದರ, ಸೋದರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಸಿ.ಎನ್. ಮುಕ್ತಾ ಅವರು ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ ಹಾಗೂ ಮುಖ್ಯ ಶಿಕ್ಷಕಿಯಾಗಿ 25 ವರ್ಷಗಳಿಗೂ ಅಧಿಕ ಕಾಲ ವಿವಿಧೆಡೆ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಅವರು 'ಸುಖದ ಸೋಪಾನ', 'ಕ್ಷಮಯಾ ಧರಿತ್ರಿ', 'ದಡ ಸೇರಿದ ನೌಕೆ', 'ಜೀವನಚಕ್ರ', 'ಅಮೃತಮಯಿ' ಹಾಗೂ 'ವಿಮುಕ್ತಿ' ಸೇರಿದಂತೆ 75ಕ್ಕೂ ಹೆಚ್ಚು ಕಾದಂಬರಿಗಳು ಮತ್ತು 15ಕ್ಕೂ ಅಧಿಕ ಕಥಾಸಂಕಲನಗಳನ್ನು ರಚಿಸಿದ್ದಾರೆ. ಅವರ ಅನೇಕ ಕಾದಂಬರಿಗಳು ರಾಜ್ಯದ ಪ್ರಮುಖ ವಾರಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ ಅಪಾರ ಜನಪ್ರಿಯತೆ ಗಳಿಸಿದ್ದವು.
ಅವರ 'ವಿಮುಕ್ತಿ' ಕಾದಂಬರಿಯನ್ನು ಆಧರಿಸಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು 'ದೋಣಿ ಸಾಗಲಿ' ಚಲನಚಿತ್ರ ನಿರ್ಮಿಸಿದ್ದರು. ಹಾಗೆಯೇ 'ಮೇಘ ಮಂದಾರ' ಕಾದಂಬರಿಯನ್ನು ಆಧರಿಸಿ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರು 'ಮಿಸ್ ಕ್ಯಾಲಿಫೋರ್ನಿಯಾ' ಚಿತ್ರವನ್ನು ನಿರ್ದೇಶಿಸಿದ್ದರು.
ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಾಗಿ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮೈಸೂರಿನ ಲಕ್ಷ್ಮಿಪುರಂನ ಆರ್.ಟಿ.ಒ. ವೃತ್ತದ ಸಮೀಪದ ಡಬಲ್ ಟ್ಯಾಂಕ್ ರಸ್ತೆ ಬದಿಯ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಅಂತ್ಯಕ್ರಿಯೆಯು ಶುಕ್ರವಾರ ಮಧ್ಯಾಹ್ನ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ನೆರವೇರಿದೆ.