ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮಣಿಪಾಲದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
Friday, July 24, 2026
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಅನ್ನು ಖಂಡಿಸಿ ಇಂದು ಮಣಿಪಾಲದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಮಣಿಪಾಲದ ಕಾಯಿನ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಸಭೆಯಲ್ಲಿ ವಿದ್ಯಾರ್ಥಿ ಮುಖಂಡರು ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಮನನೊಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಅವರ ಸಾವಿಗೆ ನ್ಯಾಯ ಒದಗಿಸಬೇಕು ಹಾಗೂ ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸ್ಮರಣಾರ್ಥ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಪ್ರತಿಭಟನೆಗೆ ಯುವ ಕಾಂಗ್ರೆಸ್ ಹಾಗೂ ಸಹಬಾಳ್ವೆ ಸಂಘಟನೆ ಬೆಂಬಲ ವ್ಯಕ್ತಪಡಿಸಿವೆ. ಯುವ ಕಾಂಗ್ರೆಸ್ ಮುಖಂಡ ವಿಶ್ವಾಸ್ ಅಮೀನ್ ಹಾಗೂ ಸಹಬಾಳ್ವೆ ಸಂಘಟನೆಯ ಫಣಿರಾಜ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

