ಚೊಕ್ಕಬೆಟ್ಟು ಮಠದ ಬಳಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ
ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೋರ್ವ ಹತ್ಯೆಗೈದಿರುವ ಘಟನೆ ಮಂಗಳೂರು ನಗರದ ಚೊಕ್ಕಬೆಟ್ಟು ಮಠದ ಸಮೀಪದ ಬಾಡಿಗೆ ಮನೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಹತ್ಯೆಯಾದ ಯುವಕನನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿಯಾಗಿರುವ ಹಾಗೂ ಪ್ರಸ್ತುತ ಚೊಕ್ಕಬೆಟ್ಟು ಮಠದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ.
ಈ ಪ್ರಕರಣದಲ್ಲಿ ಮಲ್ಲಿಕಾರ್ಜುನನ ಅಣ್ಣ ಸೋಮನಾಥ್ (21) ಮೇಲೆ ಹತ್ಯೆ ಆರೋಪ ಕೇಳಿಬಂದಿದ್ದು, ಸುರತ್ಕಲ್ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಲ್ಲಿಕಾರ್ಜುನ ಮಲಗಿದ್ದಲ್ಲೇ ತಲೆಗೆ ಭಾರೀ ಕಲ್ಲು ಎತ್ತಿಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇಬ್ಬರು ಸಹೋದರರು ತಮ್ಮ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತಾಯಿ ಇತ್ತೀಚೆಗೆ ಕೊಪ್ಪಳಕ್ಕೆ ತೆರಳಿದ್ದು, ರಾತ್ರಿ ಮನೆಯಲ್ಲಿ ಇಬ್ಬರು ಸಹೋದರರು ಮಾತ್ರ ಇದ್ದರು ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಎಚ್.ಎಂ., ಪಣಂಬೂರು ಉಪವಿಭಾಗದ ಎಸಿಪಿ ಶ್ರೀಕಾಂತ್, ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.