ಉಡುಪಿ ಕೋರ್ಟ್ ನಲ್ಲಿ ಭದ್ರತೆ ಮತ್ತಷ್ಟು ಬಿಗಿ: ಪ್ರತೀದಿನ ಬೆಳಗ್ಗೆ ಸಂಪೂರ್ಣ ತಪಾಸಣೆ
Tuesday, July 07, 2026
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಇ-ಮೇಲ್ಗಳು ಮತ್ತು ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಭದ್ರತೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಮತ್ತಷ್ಟು ಬಿಗಿಗೊಳಿಸಿದೆ. ನ್ಯಾಯಾಲಯದ ಕಲಾಪಗಳು ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಹಾಗೂ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಪ್ರತಿದಿನ ಬೆಳಗ್ಗೆ ನ್ಯಾಯಾಲಯ ಆರಂಭವಾಗುವ ಮುನ್ನ ಸಂಪೂರ್ಣ ಕೋರ್ಟ್ ಆವರಣದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.
ಪ್ರತಿದಿನ ಬೆಳಗ್ಗೆ ಪೊಲೀಸ್ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಹಕಾರದೊಂದಿಗೆ ನ್ಯಾಯಾಲಯದ ಕಟ್ಟಡ, ನ್ಯಾಯಾಂಗ ಸಭಾಂಗಣಗಳು, ವಾಹನ ನಿಲುಗಡೆ ಪ್ರದೇಶ ಮತ್ತು ಸುತ್ತಮುತ್ತಲಿನ ಆವರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ತಪಾಸಣೆ ಪೂರ್ಣಗೊಂಡ ಬಳಿಕವೇ ನ್ಯಾಯಾಲಯದ ದೈನಂದಿನ ಕಲಾಪಗಳಿಗೆ ಅವಕಾಶ ನೀಡಲಾಗುತ್ತಿದೆ.
ಉಡುಪಿ ವಕೀಲರ ಸಂಘದ ಮನವಿಯ ಮೇರೆಗೆ ನ್ಯಾಯಾಲಯದ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲಾಗಿದೆ. ಅಪರಿಚಿತ ವ್ಯಕ್ತಿಗಳ ಅನಗತ್ಯ ಪ್ರವೇಶವನ್ನು ನಿಯಂತ್ರಿಸುವ ಉದ್ದೇಶದಿಂದ ನ್ಯಾಯಾಲಯದ ಕೆಲವು ಪ್ರವೇಶ ದ್ವಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ನಿಗದಿತ ದ್ವಾರಗಳ ಮೂಲಕ ಮಾತ್ರ ಸಿಬ್ಬಂದಿ, ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರಿಗೆ ಪ್ರವೇಶ ನೀಡಲಾಗುತ್ತಿದೆ. ಅಗತ್ಯವಿದ್ದಲ್ಲಿ ಗುರುತಿನ ಚೀಟಿ ಪರಿಶೀಲನೆ ಹಾಗೂ ಬ್ಯಾಗ್ ತಪಾಸಣೆಯನ್ನೂ ನಡೆಸಲಾಗುತ್ತಿದೆ.
.jpeg)
.jpeg)