ಎಸ್ಬಿಐ ಮಣಿಪಾಲ ಶಾಖೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Thursday, July 23, 2026
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಉಡುಪಿ ಪ್ರಾದೇಶಿಕ ಕಚೇರಿಯ ವತಿಯಿಂದ ಮಾಹೆ ವಿದ್ಯಾರ್ಥಿಗಳು ಹಾಗೂ ಶಾಖೆಯ ಗ್ರಾಹಕರಿಗಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೆಎಂಸಿ ಡೆಂಟಲ್ ವಿಭಾಗದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಣಿಪಾಲ ಶಾಖೆಯ ಆವರಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಎಸ್ಬಿಐ ಉಡುಪಿ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಅಡಿಗ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬ್ಯಾಂಕಿಂಗ್ ಸೇವೆಗಳ ಜೊತೆಗೆ ಗ್ರಾಹಕರು ಮತ್ತು ಸಮಾಜದ ಆರೋಗ್ಯದ ಬಗ್ಗೆಯೂ ಎಸ್ಬಿಐ ವಿಶೇಷ ಕಾಳಜಿ ವಹಿಸುತ್ತಿದ್ದು, ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಶಿಬಿರದಲ್ಲಿ ಮಾಹೆ ವಿದ್ಯಾರ್ಥಿಗಳು ಹಾಗೂ ಗ್ರಾಹಕರು ಉತ್ಸಾಹದಿಂದ ಭಾಗವಹಿಸಿರುವುದನ್ನು ಅವರು ಶ್ಲಾಘಿಸಿದರು.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ದಂತ ತಪಾಸಣೆ, ಬಿಎಂಐ ಪರೀಕ್ಷೆ ಹಾಗೂ ವೈದ್ಯರ ಸಲಹೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಲಾಯಿತು. ವಿದ್ಯಾರ್ಥಿಗಳು ಮತ್ತು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಶಾಮಿನಿ, ಎನ್ಆರ್ಐ ಗ್ರಾಹಕ ಸುಧೀರ್, ಎಸ್ಬಿಐ ಮುಖ್ಯ ವ್ಯವಸ್ಥಾಪಕ ಶ್ರೀಕೃಷ್ಣರಾಜ್ ಕೆ. ಭಟ್, ಅಕ್ಷಯ್ ಭಾಗವತ್, ಮಣಿಪಾಲ ಶಾಖೆಯ ಉಪ ವ್ಯವಸ್ಥಾಪಕ ಶಿವಾ ರಾಜೀವ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.