-->
ಉಡುಪಿ ಜಿಲ್ಲಾಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ ಪರಿಶೀಲಿಸಿದ ಸಚಿವ ಯು.ಟಿ. ಖಾದರ್; ಆರೋಗ್ಯ ಸೇವೆ ಮತ್ತಷ್ಟು ಬಲಪಡಿಸಲು ಸೂಚನೆ

ಉಡುಪಿ ಜಿಲ್ಲಾಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ ಪರಿಶೀಲಿಸಿದ ಸಚಿವ ಯು.ಟಿ. ಖಾದರ್; ಆರೋಗ್ಯ ಸೇವೆ ಮತ್ತಷ್ಟು ಬಲಪಡಿಸಲು ಸೂಚನೆ


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಶನಿವಾರ ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸೇವೆಗಳ ಸಮಗ್ರ ಪರಿಶೀಲನೆ ನಡೆಸಿದರು. 


ಆಸ್ಪತ್ರೆಗಳಲ್ಲಿನ ಚಿಕಿತ್ಸೆ ವ್ಯವಸ್ಥೆ, ನೂತನ ಕಟ್ಟಡ, ಶಸ್ತ್ರಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವೀಕ್ಷಿಸಿದ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಸೂಚನೆಗಳನ್ನು ನೀಡಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳನ್ನು ಭೇಟಿ ಮಾಡಿದ ಸಚಿವರು, ಅವರ ಆರೋಗ್ಯ ವಿಚಾರಿಸಿ ವೈದ್ಯರು ಹಾಗೂ ಶುಶ್ರೂಷಕರ ಸೇವೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯ ಸೇವೆಗಳ ಬಗ್ಗೆ ರೋಗಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವರು ಸಂತಸ ವ್ಯಕ್ತಪಡಿಸಿದರು.

ಬಳಿಕ ಶಸ್ತ್ರಚಿಕಿತ್ಸಾ ವಿಭಾಗ (ಒಟಿ) ಪರಿಶೀಲಿಸಿದ ಅವರು, ಲಭ್ಯವಿರುವ ವೈದ್ಯಕೀಯ ಉಪಕರಣಗಳು ಹಾಗೂ ಅಗತ್ಯವಿರುವ ಹೆಚ್ಚುವರಿ ಸೌಲಭ್ಯಗಳ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಚ್. ಅಶೋಕ್ ಮತ್ತು ಜಿಲ್ಲಾಧಿಕಾರಿ ಸ್ವರೂಪ ಅವರೊಂದಿಗೆ ಚರ್ಚಿಸಿದರು.

ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ದಾಖಲಾಗಿದ್ದ ತಾಯಂದಿರು ಹಾಗೂ ಮಕ್ಕಳೊಂದಿಗೆ ಸಂವಾದ ನಡೆಸಿ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದರು. ನಂತರ ಜಿಲ್ಲಾಧಿಕಾರಿ ಸ್ವರೂಪ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಚ್. ಅಶೋಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಸೇರಿದಂತೆ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಆರೋಗ್ಯ ಇಲಾಖೆಯ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 150ಕ್ಕೂ ಹೆಚ್ಚು ಹೆರಿಗೆಗಳು ನಡೆಯುತ್ತಿರುವ ಮಾಹಿತಿ ಪಡೆದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಆಸ್ಪತ್ರೆಗಳಲ್ಲಿಯೂ ಹೆರಿಗೆ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಆಸ್ಪತ್ರೆಗೆ ಪ್ರತಿದಿನ 700ರಿಂದ 800 ಹೊರರೋಗಿಗಳು ಹಾಗೂ ಸೋಮವಾರಗಳಲ್ಲಿ 900ಕ್ಕೂ ಹೆಚ್ಚು ಮಂದಿ ಚಿಕಿತ್ಸೆಗೆ ಆಗಮಿಸುತ್ತಿರುವ ಮಾಹಿತಿ ಪಡೆದ ಸಚಿವರು, ಸರ್ಕಾರಿ ಆಸ್ಪತ್ರೆಗಳ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಶ್ಲಾಘಿಸಿದರು. ವೈದ್ಯರು, ತಜ್ಞರು ಹಾಗೂ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ಅವರು, ಸೇವಾ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಿ ಶಸ್ತ್ರಚಿಕಿತ್ಸಾ ಸೇವೆಗಳನ್ನು ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಯಶಸ್ವಿ ಚಿಕಿತ್ಸೆಗಳು ಮತ್ತು ಶಸ್ತ್ರಚಿಕಿತ್ಸೆಗಳ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ತಲುಪಿಸುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ತಿಂಗಳಿಗೆ ಎರಡು ಬಾರಿ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತಿಂಗಳಿಗೆ ಒಂದು ಬಾರಿ ಪತ್ರಿಕಾಗೋಷ್ಠಿ ಆಯೋಜಿಸಿ ಆಸ್ಪತ್ರೆಗಳ ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡದ ದುರಸ್ತಿ, ಆಸ್ಪತ್ರೆ ಎದುರಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ ತೋಡಿರುವ ಗುಂಡಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಈ ಎಲ್ಲ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲು ಜುಲೈ 16ರಂದು ಬೆಂಗಳೂರಿನಲ್ಲಿ ಆಯುಕ್ತರು, ಸಂಬಂಧಿತ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸುವುದಾಗಿ ತಿಳಿಸಿದರು.

Ads on article

Advertise in articles 1

advertising articles 2

Advertise under the article