ತೆಂಕಪೇಟೆಯಲ್ಲಿ ಮಳೆನೀರು ನಿಂತು ಸೊಳ್ಳೆ ಉತ್ಪತ್ತಿ: ಡೆಂಗ್ಯೂ ಭೀತಿ: ತುರ್ತು ಕ್ರಮಕ್ಕೆ ಒತ್ತಾಯ
Friday, July 03, 2026
ಉಡುಪಿಯ ತೆಂಕಪೇಟೆ ಸಮೀಪದಲ್ಲಿರುವ ಅಪೂರ್ಣಗೊಂಡಿರುವ ಕಟ್ಟಡವೊಂದರ ಸುತ್ತಮುತ್ತ ಮಳೆ ನೀರು ನಿಂತು ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಸ್ಥಳೀಯ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ದಿನ ಕಳೆಯುವಂತಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಟ್ಟಡದ ಅಡಿಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ಸಂಗ್ರಹವಾಗಿದ್ದು, ಇದು ಸೊಳ್ಳೆಗಳ ಸಂತಾನೋತ್ಪತ್ತಿಗೆ ಸೂಕ್ತ ತಾಣವಾಗಿದೆ. ಪರಿಣಾಮವಾಗಿ ಈ ಭಾಗದಲ್ಲಿ ಡೆಂಗ್ಯೂ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ಆತಂಕ ಹೆಚ್ಚಾಗಿದೆ.
ಸ್ಥಳೀಯರ ಪ್ರಕಾರ, ಈಗಾಗಲೇ ಈ ಪ್ರದೇಶದ ಕೆಲವು ಮನೆಗಳ ನಿವಾಸಿಗಳಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ. ಪರಿಸ್ಥಿತಿ ಗಂಭೀರವಾಗುವ ಮುನ್ನವೇ ನಗರಸಭೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಸ್ಥಳೀಯ ನಾಗರಿಕರು ಉಡುಪಿ ನಗರಸಭೆಗೆ ಲಿಖಿತ ದೂರು ಸಲ್ಲಿಸಿದ್ದು, ಅಪೂರ್ಣ ಕಟ್ಟಡದ ಸುತ್ತಮುತ್ತ ನಿಂತಿರುವ ನೀರನ್ನು ತಕ್ಷಣ ತೆರವುಗೊಳಿಸುವುದು, ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್ ಹಾಗೂ ಲಾರ್ವಿಸೈಡ್ ಸಿಂಪಡಣೆ ನಡೆಸುವುದು, ಕಟ್ಟಡ ಮಾಲೀಕರಿಗೆ ಅಗತ್ಯ ಸೂಚನೆ ನೀಡಿ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
"ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಕ್ಕಳು ಹಾಗೂ ವಯೋವೃದ್ಧರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಳಂಬ ಮಾಡದೆ ತುರ್ತು ಕ್ರಮ ಕೈಗೊಳ್ಳಬೇಕು" ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ನಗರಸಭೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳ ಆಗ್ರಹ.
.jpeg)
.jpeg)