ಪಿಯುಸಿ ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ದಾಳಿ; ಗಂಭೀರ ಗಾಯ
Monday, July 06, 2026
ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಏಕಾಏಕಿ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಮೋತಿಮಾರು ಪಡ್ಪು ಪ್ರದೇಶದಲ್ಲಿ ನಡೆದಿದೆ.
ಸ್ಥಳೀಯ ವ್ಯಾಪಾರಿ ಜವ್ವರ್ ಎಂಬಾತ ದಾಳಿ ನಡೆಸಿದ್ದಾನೆ. ಘಟನೆಯಿಂದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತೀವ್ರ ರಕ್ತಸ್ರಾವದಿಂದ ಬಸ್ ನಿಲ್ದಾಣದ ಸುತ್ತಮುತ್ತ ರಕ್ತದ ಗುರುತುಗಳು ಕಂಡುಬಂದಿದ್ದು, ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಕ್ರಮ ಕೈಗೊಂಡಿದ್ದು, ದಾಳಿಯ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.