ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಪೊಲೀಸ್ ನೋಟೀಸ್
Thursday, July 30, 2026
ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ಪೊಲೀಸರು ಬುಧವಾರ ನೋಟೀಸ್ ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗೆ ಸಹಕರಿಸುವಂತೆ ಹಾಗೂ ವಿಚಾರಣೆಗೆ ಠಾಣೆಗೆ ಹಾಜರಾಗುವಂತೆ ಉಡುಪಿ ನಗರ ಠಾಣೆಯ ಎಸ್ಸೈ ಭರತೇಶ್ ಕಂಕನವಾಡಿ ಅವರು ಶಾಸಕರ ನಿವಾಸಕ್ಕೆ ತೆರಳಿ ನೋಟೀಸ್ ನೀಡಿದರು. ಶಾಸಕ ಯಶ್ಪಾಲ್ ಸುವರ್ಣ ಅವರು ನೋಟೀಸ್ ಸ್ವೀಕರಿಸಿದ್ದಾರೆ.ಪ್ರಕರಣದ ತನಿಖೆಯನ್ನು ಉಡುಪಿ ನಗರ ಪೊಲೀಸರು ಮುಂದುವರಿಸಿದ್ದಾರೆ.