ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಮಠದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ
ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಶ್ರೀ ಪುತ್ತಿಗೆ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು ಶ್ರದ್ಧಾ–ಭಕ್ತಿ ಹಾಗೂ ವೈಭವದಿಂದ ಜರುಗಿತು.
ಸಿಡ್ನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಗುರುರಾಯರ ದರ್ಶನ ಪಡೆದು ಕೃತಾರ್ಥರಾದರು.
ಆರಾಧನಾ ಮಹೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಶ್ರೀ ಗುರುರಾಯರಿಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ಅಷ್ಟೋತ್ತರ ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಭಕ್ತರಿಂದ ಶ್ರೀ ರಾಘವೇಂದ್ರ ಸ್ತೋತ್ರ ಪಾರಾಯಣ, ಅಷ್ಟೋತ್ತರ ಪಾರಾಯಣ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಪೂರ್ವಕವಾಗಿ ನಡೆದವು.
ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕರಾಗಿ ನಿತಿಶ್ ಆಚಾರ್ಯ ಅವರು ಶ್ರೀ ಗುರುರಾಯರ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ಅಷ್ಟೋತ್ತರ ಅರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ವಿಧಿವತ್ತಾಗಿ ನೆರವೇರಿಸಿದರು. ನಾರಾಯಣ ಭಟ್ ಅವರು ಪೂಜಾ ಕಾರ್ಯಗಳಲ್ಲಿ ಸಹಕರಿಸಿದರು.
ಮಹೋತ್ಸವದ ಅಂಗವಾಗಿ ಸಾಂಪ್ರದಾಯಿಕ ಉಡುಪಿ ಶೈಲಿಯಲ್ಲಿ ಸಿದ್ಧಪಡಿಸಲಾದ ಭೋಜನ ಪ್ರಸಾದದೊಂದಿಗೆ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ರಿವರ್ಸ್ಟೋನ್ ಕ್ಷೇತ್ರದ ಲೇಬರ್ ಪಕ್ಷದ ಸಂಸದ ವಾರೆನ್ ಕಿರ್ಬಿ (Warren Kirby MP)ಆಗಮಿಸಿ, ಶ್ರೀ ಗುರುರಾಯರ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಬಳಿಕ ಅವರು ಭೋಜನ ಪ್ರಸಾದವನ್ನೂ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾರೆನ್ ಕಿರ್ಬಿ ಅವರು, ಭಾರತೀಯ ಸಮುದಾಯವು ತನ್ನ ಶ್ರೀಮಂತ ಧಾರ್ಮಿಕ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಶ್ರದ್ಧೆಯಿಂದ ಉಳಿಸಿ ಬೆಳೆಸುತ್ತಿರುವುದನ್ನು ಶ್ಲಾಘಿಸಿದರು. ಆಸ್ಟ್ರೇಲಿಯಾದ ಬಹುಸಾಂಸ್ಕೃತಿಕ ಸಮಾಜಕ್ಕೆ ಭಾರತೀಯ ಸಮುದಾಯ ನೀಡುತ್ತಿರುವ ಕೊಡುಗೆ ಮಹತ್ವದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸೌಹಾರ್ದ, ಸಹಬಾಳ್ವೆ ಹಾಗೂ ಬಹುಸಾಂಸ್ಕೃತಿಕ ಚಟುವಟಿಕೆಗಳಿಗೆ ಸರ್ಕಾರದ ಸಹಕಾರ ಸದಾ ಇರಲಿದೆ ಎಂದು ತಿಳಿಸಿದರು.
ಈ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ಭಾರತದಿಂದ ವಿಶೇಷವಾಗಿ ಆಗಮಿಸಿದ್ದ ಶ್ರೀ ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೆರೆದ ಭಕ್ತರಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀಪಾದರ ಆಶೀರ್ವಾದ ಹಾಗೂ ಶುಭ ಸಂದೇಶವನ್ನು ಭಕ್ತರಿಗೆ ತಲುಪಿಸಿದರು. ಮಂಜುನಾಥ ಭಟ್ ಅವರ ನೇತೃತ್ವದಲ್ಲಿ ದೇವರಪ್ರಸಾದವನ್ನು ಸಿದ್ಧಪಡಿಸಲಾಗಿತ್ತು.
ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜದ ಪ್ರಮುಖರು, ಭಕ್ತರು ಹಾಗೂ ಸ್ವಯಂಸೇವಕರು ಮಹೋತ್ಸವದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ಯಶಸ್ಸಿಗಾಗಿ ಅನೇಕ ಭಕ್ತರು ಶ್ರದ್ಧೆಯಿಂದ ಸೇವೆ ಸಲ್ಲಿಸಿದರು.



