ಹಿಂದೂ ಕಾರ್ಯಕರ್ತರಿಗೆ ಅನಗತ್ಯ ನಿರ್ಬಂಧ, ಕಿರುಕುಳ ಸಹಿಸುವುದಿಲ್ಲ: ಮಹೇಶ್ ಕಡಗದಾಳು
ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ಅನಗತ್ಯವಾಗಿ ಮಾನಸಿಕ ಕಿರುಕುಳ ನೀಡುವುದನ್ನು ಮುಂದುವರಿಸಿದಲ್ಲಿ, ಜಿಲ್ಲಾಡಳಿತದ ಕ್ರಮದ ವಿರುದ್ಧ ಜಿಲ್ಲೆಯಾದ್ಯಂತ ಹೋರಾಟ ನಡೆಸುವುದಾಗಿ ಹಿಂದು ಜಾಗರಣ ವೇದಿಕೆ ಪ್ರಾಂತ ಸಹ ಸಂಚಾಲಕರಾದ ಮಹೇಶ್ ಕಡಗದಾಳು ಎಚ್ಚರಿಕೆ ನೀಡಿದ್ದಾರೆ.
80ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಬೇಕಿದ್ದ ಪ್ರಸಾದ್ ಅತ್ತಾವರ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿರುವ ಕ್ರಮವನ್ನು ಖಂಡಿಸಿರುವ ಅವರು, ಇಂತಹ ಯಾವುದೇ ಬೆದರಿಕೆಗಳಿಗೆ ಹಿಂದು ಜಾಗರಣ ವೇದಿಕೆ ಬಗ್ಗುವುದಿಲ್ಲ ಎಂದಿದ್ದಾರೆ.
ವಾಕ್ ಸ್ವಾತಂತ್ರ್ಯವನ್ನು ದಮನಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಾನಸಿಕತೆ ಬ್ರಿಟಿಷರ ಮಾನಸಿಕತೆಯನ್ನು ಬಿಂಬಿಸುವಂತಿದೆ ಎಂದು ಆರೋಪಿಸಿದರು. ದೇಶದ ಕಾನೂನು ಹಾಗೂ ಸಂವಿಧಾನದ ಚೌಕಟ್ಟಿನೊಳಗೆ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘಟನೆಗಳ ಕಾರ್ಯಕರ್ತರಿಗೆ ಈ ರೀತಿಯ ನಿರ್ಬಂಧ ಹಾಗೂ ಮಾನಸಿಕ ಕಿರುಕುಳ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸಬೇಕಾದ ಜವಾಬ್ದಾರಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕಿದೆ. ಸಾಮಾಜಿಕ ಸಂಘಟನೆಗಳ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರುವ ಬದಲು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.