ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ
Saturday, August 01, 2026
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ ಸಂಭವಿಸಿದೆ.
ನಿತ್ಯ ನೂರಾರು ಪ್ರವಾಸಿಗರು ಹಾಗೂ ಸ್ಥಳೀಯರು ಸಂಚರಿಸುವ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡದ ಮಣ್ಣು ರಸ್ತೆಗೆ ಕುಸಿದಿದೆ. ಗುಡ್ಡ ಕುಸಿತ ತಡೆಗಟ್ಟುವ ಉದ್ದೇಶದಿಂದ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ಈ ಭೂಕುಸಿತ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ರಸ್ತೆ ಅತ್ತಿಗುಂಡಿ, ಮಹಲ್ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ. ಅಲ್ಲದೆ ಮುಳ್ಳಯ್ಯನಗಿರಿ ತಪ್ಪಲಿನ ಕಾಫಿ ತೋಟಗಳಿಗೆ ಪ್ರತಿದಿನ ಸಾವಿರಾರು ಕೂಲಿ ಕಾರ್ಮಿಕರು ಇದೇ ರಸ್ತೆಯ ಮೂಲಕ ಸಂಚರಿಸುತ್ತಾರೆ. ್
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಜೆಸಿಬಿ ಯಂತ್ರಗಳ ಸಹಾಯದಿಂದ ರಸ್ತೆಗೆ ಕುಸಿದಿದ್ದ ಮಣ್ಣನ್ನು ತ್ವರಿತವಾಗಿ ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಸದ್ಯ ಮಾರ್ಗದಲ್ಲಿ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿದೆ
ಇನ್ನೊಂದೆಡೆ, ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭೂಮಿಯ ತೇವಾಂಶ ಹೆಚ್ಚಾಗಿದ್ದು, ಮತ್ತಷ್ಟು ಪ್ರದೇಶಗಳಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಗಳು ಅಗತ್ಯ ಎಚ್ಚರಿಕೆ ವಹಿಸಿ ಸಂಚರಿಸುವಂತೆ ಮನವಿ ಮಾಡಿದೆ.
