ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಪಾರು
Thursday, August 20, 2026
ಉಡುಪಿಯ ಬ್ರಹ್ಮಾವರ ಸಮೀಪ ಖಾಸಗಿ ಬಸ್ಸೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಇಡಿಸಿ ಬಾಕ್ಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನಿರ್ವಾಹಕರು ಸಮಯಪ್ರಜ್ಞೆ ಮೆರೆದು ಬಸ್ಸನ್ನು ನಿಲ್ಲಿಸಿ, ಅದರಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.
ಇದರಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಬಳಿಕ ಬಸ್ಸಿಗೆ ಬೆಂಕಿ ವ್ಯಾಪಿಸಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿರ್ವಾಹಕರ ಸಮಯೋಚಿತ ಕ್ರಮದಿಂದ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

